ಹೊಸದಿಲ್ಲಿ: ಮಾನನಷ್ಟ ಮೊಕದ್ದಮೆಯಲ್ಲಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ಐದು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ.
ಮೇಧಾ ವಿರುದ್ಧ ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದಲ್ಲಿ ದಿಲ್ಲಿಯ ಸಾಕೇತ್ ಕೋರ್ಟ್ ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ಘೋಷಿಸಿತ್ತು. ಇದೀಗ ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಮೇಧಾ ಪಾಟ್ಕರ್ ಅವರನ್ನು ದೋಷಿ ಎಂದು ಘೋಷಿಸಿದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಸಕ್ಸೇನಾ ಅವರಿಗೆ 10ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.
ಆ.1ರವರೆಗೆ ಆಕೆಯ ಶಿಕ್ಷೆಯ ವಿನಾಯಿತಿ ನೀಡಿದ್ದು, ಅಲ್ಲಿವರೆಗೆ ಆಕೆಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಕರಣದ ಗಂಭೀರತೆ, ಮೇಧಾ ಪಾಟ್ಕರ್ ಅವರ ವಯಸ್ಸು ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಸರಳ ಸಜೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಶಿಕ್ಷೆಯ ಪ್ರಮಾಣ ಘೋಷಣೆಯಾಗುತ್ತಲ್ಲೇ ಈ ಬಗ್ಗೆ ಮೇಧಾ ಪಾಟ್ಕರ್ ಪ್ರತಿಕ್ರಿಯಿಸಿದ್ದು, ಸತ್ಯ ಎಂದಿಗೂ ಸಾಯಲ್ಲ. ನಾವು ಯಾರನ್ನೂ ಅವಮಾನಿಸಿಲ್ಲ. ನಾವು ನಮ್ಮ ಕೆಲಸವನ್ನಷ್ಟೇ ಮಾಡಿದ್ದೇವೆ. ತೀರ್ಪನ್ನು ಪ್ರಶ್ನಿಸಿ ಮೆಲ್ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.