ಅಮರಾವತಿ: ಚುನಾವಣೋತ್ತರ ಸಮೀಕ್ಷೆಯಂತೆಯೇ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ ಭರ್ಜರಿ ಜಯ ದಾಖಲಿಸುವತ್ತ ದಾಪುಗಾಲು ಇಟ್ಟಿದೆ. ಟಿಡಿಪಿ ಈಗಾಗಲೇ ಮ್ಯಾಜಿಕ್ ನಂಬರ್ 88 ಅನ್ನು ದಾಟಿದ್ದು, ಜೂನ್ 9ರಂದು ಅಮರಾವತಿಯಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ.
ಈ ಮೂಲಕ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ. ಆಂಧ್ರ ಪ್ರದೇಶದಲ್ಲಿ ಟಿಡಿಪಿ ಈ ಬಾರಿ ಬಿಜೆಪಿ ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಜತೆಗೂಡಿ ಎನ್ಡಿಎ ಬಣದ ಅಡಿಯಲ್ಲಿ ಸ್ಪರ್ಧಿಸಿತ್ತು.
ಟಿಡಿಪಿ ಒಂದೇ 131 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಜಸಸೇನಾ ಪಕ್ಷ 20 ಮತ್ತು ಬಿಜೆಪಿ 7ರಲ್ಲಿ ಮುಂದಿದೆ. ಒಟ್ಟಾರೆಯಾಗಿ ಎನ್ಡಿಎ 158 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತಾರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ ಕೇವಲ 17 ಕ್ಷೇತ್ರಗಳಲ್ಲಿ ಮುಂದಿದೆ. ಈ ಬಾರಿ ಆಂಧ್ರ ಪ್ರದೇಶದಲ್ಲಿ ಜನಸೇನಾ ಪಾರ್ಟಿ, ಬಿಜೆಪಿ ಮತ್ತು ಟಿಡಿಪಿ ಒಪ್ಪಂದ ಮಾಡಿಕೊಂಡಿತ್ತು. ಅದರ ಪ್ರಕಾರ 175 ಸೀಟುಗಳ ವಿಧಾನ ಸಭೆಯಲ್ಲಿ ಟಿಡಿಪಿ 144, ಜನಸೇನಾ ಪಾರ್ಟಿ 21 ಮತ್ತು ಬಿಜೆಪಿ 10 ಕಡೆ ಸ್ಪರ್ಧಿಸಿತ್ತು.

