ದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಭಾರತದ ಸ್ಟಾರ್ ಪಿಸ್ತೂಲ್ ಶೂಟರ್ ಮನು ಭಾಕರ್ ದೇಶಕ್ಕೆ ವಾಪಸ್ಸಾಗಿದ್ದಾರೆ.

ಮೊದಲು ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದ ಮನು, ಆ ನಂತರ ಸರಬ್ಜೋತ್ ಸಿಂಗ್ ಅವರೊಂದಿಗೆ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿದ್ದರು.

ದೇಶದ ಕೀರ್ತಿಯನ್ನು ವಿಶ್ವ ಮಟ್ಟದಲ್ಲಿ ಬೆಳಗಿಸಿದ ಮನು ಅವರಿಗೆ ದೆಹಲಿಯಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಇದಾದ ಬಳಿಕ ಮನು ಭಾಕರ್, ತಮ್ಮ ಕೋಚ್ ಹಾಗೂ ತಮ್ಮ ಕುಟುಂಬಸ್ಥರೊಂದಿಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿ ಮಾಡಿದ್ದಾರೆ. ಮನುಗೆ ಹೂಗುಚ್ಛ ನೀಡಿ ಬರಮಾಡಿಕೊಂಡ ಜ್ಯೋತಿರಾದಿತ್ಯ ಸಿಂಧಿಯಾ, ಈ ಐತಿಹಾಸಿಕ ಸಾಧನೆಗೆ ಅಭಿನಂದನೆ ಸಲ್ಲಿಸುವುದರ ಜೊತೆಗೆ ವಿಶೇಷವಾಗಿ ಪುಟ್ಟ ಗಣೇಶನ ವಿಗ್ರಹ ನೀಡಿ ಗೌರವಿಸಿದರು.