ನವದೆಹಲಿ: ಜಾಮೀನಿನ ಮೇಲೆ ಹೊರಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮಧ್ಯಂತರ ಜಾಮೀನು ಜೂನ್ 2 ರಂದು ಕೊನೆಗೊಳಲಿದ್ದು ಮತ್ತೆ ಜೈಲಿಗೆ ಹೋಗುವಮುಂಚೆ ತಮ್ಮ ಜನರಲ್ಲಿ ಭಾವನಾತ್ಮಕ ಮನವಿವೊಂದನ್ನು ಮಾಡಿಕೊಂಡಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ನನಗೆ ಪ್ರಚಾರಕ್ಕೆ 21 ದಿನಗಳ ಕಾಲಾವಕಾಶ ನೀಡಿತ್ತು. ನಾಳೆಗೆ 21 ದಿನಗಳು ಪೂರ್ಣಗೊಳ್ಳುತ್ತಿವೆ. ಭಾನುವಾರ ನಾನು ಶರಣಾಗಬೇಕಾಗಿದ್ದು, ಮತ್ತೆ ತಿಹಾರ್ ಜೈಲಿಗೆ ಹೋಗುತ್ತೇನೆ. ಈ ಜನರು ನನ್ನನ್ನು ಎಷ್ಟು ದಿನ ಜೈಲಿನಲ್ಲಿ ಇಡುತ್ತಾರೋ ಗೊತ್ತಿಲ್ಲ. ಆದರೆ ನನ್ನ ಉತ್ಸಾಹ ಹೆಚ್ಚಾಗಿದೆ. ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಲು ನಾನು ಜೈಲಿಗೆ ಹೋಗುತ್ತಿದ್ದೇನೆ ಎಂದು ನನಗೆ ಹೆಮ್ಮೆ ಇದೆ ಎಂದರು.
ನನ್ನ ಹೆತ್ತವರಿಗೆ ವಯಸ್ಸಾಗಿದೆ. ನನ್ನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜೈಲಿನಲ್ಲೂ ಆಕೆಯ ಬಗ್ಗೆ ನಾನು ತುಂಬಾ ಚಿಂತಿತನಾಗುತ್ತೇನೆ. ಹೀಗಾಗಿ ನನ್ನ ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಹೇಳಿದರು.
ನನ್ನ ಹೆಂಡತಿ ಸುನೀತಾ ತುಂಬಾ ಧೈರ್ಯವಂತೆ. ಕಷ್ಟದ ಸಮಯದಲ್ಲಿ ಆಕೆ ನನಗೆ ಬೆಂಬಲವಾಗಿ ನಿಂತಿದ್ದಾಳೆ. ನನ್ನ ಜೀವನದಲ್ಲಿ ಕಷ್ಟದ ಸಮಯ ಬಂದಾಗ, ನೀವೆಲ್ಲರೂ ನನಗೆ ಬೆಂಬಲ ನೀಡಿದ್ದೀರಿ. ನನ್ನ ಪ್ರಾಣ ಹೋದ್ರೂ ಸರಿ ಸರ್ವಾಧಿಕಾರದ ವಿರುದ್ಧ ಹೋರಾಡುತ್ತೇನೆ. ದುಃಖಿಸಬೇಡಿ, ನಾನು ಇಂದು ಜೀವಂತವಾಗಿದ್ದೇನೆ. ನಿಮ್ಮೆಲ್ಲರ ಆಶೀರ್ವಾದವು ನನ್ನನ್ನು ರಕ್ಷಿಸುತ್ತದೆ. ದೇವರು ಬಯಸಿದಲ್ಲಿ ಈ ನಿಮ್ಮ ಮಗ ಶೀಘ್ರದಲ್ಲೇ ಹಿಂದಿರುಗುತ್ತಾನೆ ಎಂದು ಕೇಜ್ರಿವಾಲ್ ಭಾವುಕರಾಗಿದ್ದಾರೆ.
ನಾನು ಜೈಲಿನಲ್ಲಿದ್ದರೂ ದೆಹಲಿಯ ಜನರಿಗೋಸ್ಕರ ನನ್ನ ಸೇವೆ ನಿಲ್ಲಲ್ಲ ಎಂದು ಭರವಸೆ ನೀಡಲು ಬಯಸುತ್ತೇನೆ ಎಂದ ಅವರು, ಮತ್ತೆ ಶರಣಾಗಲು ನಾನು ಭಾನುವಾರ ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರಡುತ್ತೇನೆ. ಈ ಬಾರಿ ಅವರು ನನ್ನನ್ನು ಹೆಚ್ಚು ಹಿಂಸಿಸುವ ಸಾಧ್ಯತೆಯಿದೆ. ಆದರೆ ಇದಕ್ಕೆ ನಾನು ತಲೆಕೆಡಿಸಲ್ಲ. ನೀವು ತುಂಬಾ ಸಂತೋಷದಿಂದಿದ್ದರೆ, ನಿಮ್ಮ ಮುಖ್ಯಮಂತ್ರಿ ಕೇಜ್ರಿವಾಲ್ ಕೂಡ ಸಂತೋಷವಾಗಿರುತ್ತಾರೆ ಎಂದು ಹೇಳಿದರು.
ನಿಮ್ಮ ಸೇವೆ ಮಾಡುವುದನ್ನು ನಾನು ನಿಲ್ಲಿಸುವುದಿಲ್ಲ. ಮೊಹಲ್ಲಾ ಚಿಕಿತ್ಸಾಲಯಗಳು, ಉಚಿತ ಔಷಧಗಳು, ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, 24 ಗಂಟೆಗಳ ವಿದ್ಯುತ್ ಮುಂದುವರಿಯುತ್ತದೆ ಎಂದು ಕೇಜ್ರಿವಾಲ್ ಭರವಸೆ ನೀಡಿದರು.
#WATCH | Delhi CM Arvind Kejriwal says, “The Supreme Court had given me 21 days to campaign for the elections. The day after tomorrow I will go back to Tihar Jail. I don’t know how long these people will keep me in jail this time. But my spirits are high. I am proud that I am… pic.twitter.com/JinN6Ay9Zb
— ANI (@ANI) May 31, 2024

