ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ಹಿರಿಯ ಸದಸ್ಯರಾದ ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು  ಮತ್ತು ಜೆಡಿಯುನ ನಿತೀಶ್ ಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.

ಚುನಾಯಿತ ಸಂಸದರು ನರೇಂದ್ರ ಮೋದಿ  ಅವರನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಲು ಇಂದು  ಸಭೆ ಸೇರಲಿದ್ದು, ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ದಾರಿ ಮಾಡಿಕೊಡಲಿದ್ದಾರೆ.

ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಾವೆಲ್ಲ ಸಂಸದರು ಬೆಂಬಲ ನೀಡುತ್ತಾರೆಂಬ ಪಟ್ಟಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದು, ಕಾಂಗ್ರೆಸ್ 99 ಸ್ಥಾನಗಳೊಂದಿಗೆ ಎರಡನೇ ಪಕ್ಷವಾಗಿ ಹೊರಹೊಮ್ಮಿದೆ. ಎನ್‌ಡಿಎ 293 ಸ್ಥಾನಗಳೊಂದಿಗೆ ಬಹುಮತ ಹೊಂದಿದ್ದು, ಸರ್ಕಾರ ರಚನೆ ಕುರಿತು ಸಭೆ ನಡೆಸುತ್ತಿದೆ.

ಆಂಧ್ರಪ್ರದೇಶ ಮತ್ತು ಬಿಹಾರದಲ್ಲಿ ಕ್ರಮವಾಗಿ 16 ಮತ್ತು 12 ಸ್ಥಾನಗಳನ್ನು ಗೆದ್ದಿರುವ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಹಾಗೂ ಇತರ ಮೈತ್ರಿ ಪಾಲುದಾರರ ಬೆಂಬಲದೊಂದಿಗೆ ಎನ್‌ಡಿಎ ಬಹುಮತವನ್ನು ಪಡೆದಿದೆ.