ನವದೆಹಲಿ: ಕಳೆದ 4 ವರ್ಷಗಳಲ್ಲಿ ಸುಮಾರು 8 ಕೋಟಿ ಹೊಸ ಉದ್ಯೋಗಗಳನ್ನು ದೇಶದಲ್ಲಿ ಸೃಷ್ಟಿಸಲಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರವಾಗಿ ಖಂಡಿಸಿದ್ದಾರೆ.
ಮುಂಬೈನಲ್ಲಿ ಪ್ರಧಾನಿ ಮೋದಿ 29,000 ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಆರ್ಬಿಐ ವರದಿ ಉಲ್ಲೇಖಿಸಿ ಮಾತನಾಡಿದ್ದರು. ಉದ್ಯೋಗ ಸೃಷ್ಟಿಯ ಕುರಿತು ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ ವರದಿ ನೀಡಿದೆ.
ಕಳೆದ 3-4 ವರ್ಷದಲ್ಲಿ ಸುಮಾರು 8 ಕೋಟಿ ಹೊಸ ಉದ್ಯೋಗಗಳನ್ನು ದೇಶದಲ್ಲಿ ಸೃಷ್ಟಿಸಲಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಯನ್ನು ಖರ್ಗೆ ಖಂಡಿಸಿದ್ದಾರೆ. ಅಲ್ಲದೇ ಪ್ರಧಾನಿ ಮುಂದೆ ಮೂರು ಪ್ರಶ್ನೆಗಳನ್ನೂ ಇಟ್ಟಿದ್ದಾರೆ.
ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, ನರೇಂದ್ರ ಮೋದಿಜೀ ನಮಗೆ ಮೂರು ಪ್ರಶ್ನೆಗಳಿವೆ. ರಾಷ್ಟ್ರೀಯ ನೇಮಕಾತಿ ಏಜೆನ್ಸಿಯ ಕಳೆದ 4 ವರ್ಷಗಳಿಂದ ಒಂದೇ ಒಂದು ಪರೀಕ್ಷೆಯನ್ನೂ ನಡೆಸಿಲ್ಲ, ಏಕೆ? ಎನ್ಆರ್ಎಗೆ 1,517.57 ಕೋಟಿ ರೂ. ಹಣ ನೀಡಿದ್ದರೂ ಕಳೆದ 4 ವರ್ಷಗಳಲ್ಲಿ ಕೇವಲ 58 ಕೋಟಿ ರೂ. ಮಾತ್ರ ಬಳಕೆಯಾಗಿದೆ ಏಕೆ?.
ಎನ್ಆರ್ಎ ಅನ್ನು ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ನಡೆಸಲು ಒಂದು ಸಂಸ್ಥೆಯಾಗಿ ರಚಿಸಲಾಗಿದೆ. ಆದರೆ ಸರ್ಕಾರ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಇಡಬ್ಲ್ಯೂಎಸ್ ಯುವಜನರ ಮೀಸಲಾತಿ ಹಕ್ಕನ್ನು ಕಸಿದುಕೊಳ್ಳಲು ಉದ್ದೇಶಪೂರ್ವಕವಾಗಿಯೇ ರಾಷ್ಟ್ರೀಯ ನೇಮಕಾತಿ ಏಜೆನ್ಸಿಯನ್ನು ನಿಕ್ಷ್ರಿಯಗೊಳಿಸಲಾಗಿದೆಯೇ? ಎಂದು ಮೂರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.
ಉದ್ಯೋಗ ಸೃಷ್ಟಿಯ ಕುರಿತು ಇತ್ತೀಚೆಗೆ ಭಾರತೀಯ ರಿಸರ್ವ್ ಬ್ಯಾಂಕ್ ವರದಿ ನೀಡಿದೆ. ಕಳೆದ 3-4 ವರ್ಷದಲ್ಲಿ ಸುಮಾರು 8 ಕೋಟಿ ಹೊಸ ಉದ್ಯೋಗಗಳನ್ನು ದೇಶದಲ್ಲಿ ಸೃಷ್ಟಿಸಲಾಗಿದೆ. ಆರ್ಬಿಐ ನೀಡಿದ ಈ ಅಂಕಿ-ಅಂಶಗಳು ಸುಳ್ಳು ಸುದ್ದಿ ಹರಡುವವರು, ಅಜೆಂಡಾ ಬಿತ್ತುವವರನ್ನು ಸುಮ್ಮನಾಗಿಸಿವೆ.
ಯಾರು ಹೂಡಿಕೆ, ಮೂಲ ಸೌಕರ್ಯ ಹಾಗೂ ದೇಶದ ಅಭಿವೃದ್ಧಿಯನ್ನು ವಿರೋಧಿಸುತ್ತಿದ್ದರೋ, ಅವರೆಲ್ಲರ ಬಣ್ಣ ಈಗ ಬಯಲಾಗಿದೆ. ಇಂತಹ ಪಿತೂರಿಗಳನ್ನು ದೇಶದ ಜನ ತಿರಸ್ಕರಿಸುತ್ತಿದ್ದಾರೆ ಎಂದು ಪ್ರತಿಪಕ್ಷಗಳಿಗೆ ಕುಟುಕಿದ್ದರು.

