ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅತಿಶಿ ಇಂದು ಮೊದಲ ಪತ್ರಿಕಾಗೋಷ್ಠಿ ನಡೆಸಿದರು. ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ದೆಹಲಿ ಸಿಎಂ ಮಾಡುವುದೊಂದೇ ನನ್ನ ಕೆಲಸ ಎಂದು ಹೇಳಿರುವ ಅತಿಶಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಿತೂರಿ ನಡೆಸಿತು, ಅವರನ್ನು 6 ತಿಂಗಳು ಜೈಲಿನಲ್ಲಿ ಇರಿಸಿತು, ಅವರನ್ನು ನಾಶ ಮಾಡಲು ಪ್ರಯತ್ನಿಸಿತು. ಆದರೆ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿತು. ಇಡಿ ಮತ್ತು ಸಿಬಿಐ ಕೇಂದ್ರ ಸರ್ಕಾರದ ಗಿಳಿಗಳಾಗಿ ಮಾರ್ಪಟ್ಟಿದೆ ಎಂದು ಅತಿಶಿ ಆರೋಪಿಸಿದ್ದಾರೆ.
ಈಗ ನಮ್ಮ ಕೆಲಸವೆಂದರೆ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತೆ ಸಿಎಂ ಮಾಡುವುದು ಎಂದು ಹೊಸ ದೆಹಲಿ ಸಿಎಂ ಅತಿಶಿ ಹೇಳಿದ್ದಾರೆ. ಕೇಜ್ರಿವಾಲ್ ಬಡವರಿಗೆ ವಿದ್ಯುತ್ ನೀಡಿದ ವ್ಯಕ್ತಿ. ಅವರು ಮಕ್ಕಳಿಗೆ ಶಿಕ್ಷಣ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಇನ್ನೂ ಅನೇಕ ಯೋಜನೆಗಳನ್ನು ಪರಿಚಯಿಸಿದವರು ಎಂದು ಅತಿಶಿ ಹೇಳಿದರು.

