ನವದೆಹಲಿ: ಕೇಂದ್ರ ಬಜೆಟ್‌ಗೆ ದಿನಾಂಕ ನಿಗದಿಯಾಗಿದ್ದು, ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದ್ದು, ಜುಲೈ 23ರಂದು ನಿರ್ಮಲಾ ಸೀತಾರಾಮನ್‌ ಅವರು ದಾಖಲೆಯ ಏಳನೇ ಬಾರಿಗೆ ಬಜೆಟ್‌ ಮಂಡಿಸಲಿದ್ದಾರೆ.

ಬಜೆಟ್‌ನಲ್ಲಿ ತೆರಿಗೆ ವಿನಾಯಿತಿ, ಬಡ-ಮಧ್ಯಮ ವರ್ಗದವರಿಗೆ ಹಲವು ರೀತಿಯಲ್ಲಿ ಅನುಕೂಲವಾಗುವ ಯೋಜನೆಗಳ ಘೋಷಣೆ ಕುರಿತು ನಿರೀಕ್ಷೆ ಹೆಚ್ಚಾಗಿದೆ. ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು ಬಜೆಟ್‌ ಅಧಿವೇಶನದ ಕುರಿತು ಮಾಹಿತಿ ನೀಡಿದ್ದಾರೆ.

“ಜುಲೈ 22ರಿಂದ ಆಗಸ್ಟ್‌ 12ರವರೆಗೆ ಬಜೆಟ್‌ ಅಧಿವೇಶನ ನಡೆಯಲಿದೆ. ಜುಲೈ 23ರಂದು ಬಜೆಟ್‌ ಮಂಡಿಸಲಾಗುತ್ತದೆ” ಎಂಬುದಾಗಿ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದು ಎನ್‌ಡಿಎ ಸರ್ಕಾರದ ಮೂರನೇ ಅವಧಿಯ ಮೊದಲ ಮುಂಗಡಪತ್ರವಾಗಿದೆ.

ನಿರ್ಮಲಾ ಸೀತಾರಾಮನ್‌ ಅವರು ಇದೇ ತಿಂಗಳು ಪೂರ್ಣಪ್ರಮಾಣದ ಬಜೆಟ್‌ ಮಂಡಿಸಿದರೆ ಹೊಸ ದಾಖಲೆ ಬರೆಯಲಿದ್ದಾರೆ. ಇದುವರೆಗೆ ನಿರ್ಮಲಾ ಸೀತಾರಾಮನ್‌ ಅವರು ಹಣಕಾಸು ಸಚಿವೆಯಾಗಿ ಐದು ಪೂರ್ಣ ಪ್ರಮಾಣದ ಹಾಗೂ ಒಂದು ಮಧ್ಯಂತರ ಬಜೆಟ್‌ ಮಂಡಿಸಿದ್ದಾರೆ.

ಈಗ ಏಳನೇ ಬಾರಿಗೆ ಬಜೆಟ್‌ ಮಂಡಿಸಿದರೆ, ದೇಶದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಖ್ಯಾತಿಗೆ ಭಾಜನರಾಗಲಿದ್ದಾರೆ. ಮೊರಾರ್ಜಿ ದೇಸಾಯಿ ಅವರು ಆರು ಬಾರಿ ಬಜೆಟ್‌ ಮಂಡಿಸಿದ ದಾಖಲೆ ಮಾಡಿದ್ದಾರೆ. ಇದನ್ನು ನಿರ್ಮಲಾ ಸೀತಾರಾಮನ್‌ ಅವರು ಮುರಿಯಲಿದ್ದಾರೆ.