ದೆಹಲಿ: ಮಂಗಳವಾರ ಉತ್ತರ ಪ್ರದೇಶದ ಹಾಥರಸ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 107 ಮಂದಿ ಸಾವಿಗೀಡಾಗಿದ್ದಾರೆ. ಈ ಘಟನೆಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ ಸಂತ್ರಸ್ತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.
ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಚರ್ಚೆಯಲ್ಲಿ ಮಾತನಾಡಿದ ಮೋದಿ, “ನಾನು ಮಾತನಾಡುತ್ತಿದ್ದಂತೆ, ಉತ್ತರ ಪ್ರದೇಶದ ಹಾಥರಸ್ನಲ್ಲಿ ಕಾಲ್ತುಳಿತದಲ್ಲಿ ಅನೇಕ ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಉತ್ತರ ಪ್ರದೇಶ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡಲಾಗುವುದು ಎಂದು ನಾನು ಈ ಸದನದ ಮೂಲಕ ಎಲ್ಲರಿಗೂ ಭರವಸೆ ನೀಡುತ್ತೇನೆ ಎಂದಿದ್ದಾರೆ.
ಏತನ್ಮಧ್ಯೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದುರಂತದಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವಂತೆ ಸೂಚನೆ ನೀಡಿದರು.