ನವದೆಹಲಿ: ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದರೆ ಕಾಂಗ್ರೆಸ್ ಪಕ್ಷದ ನೇತೃತ್ವದ ಇಂಡಿಯ ಬಣದಿಂದ ದೇಶದ ಪ್ರಧಾನಿಯಾಗಿ ರಾಹುಲ್ ಗಾಂಧಿ ಅವರ ಆಯ್ಕೆಗೆ ನನ್ನ ಬೆಂಬಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಖಾಸಗಿ ಸುದ್ದಿವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಈ ಲೋಕಸಭೆ ಚುನಾವಣೆಗೂ ಮೊದಲು ಎರಡು ‘ಭಾರತ್ ಜೋಡೋ ಯಾತ್ರೆ’ಗಳನ್ನು ಮುನ್ನಡೆಸಿದ್ದರು.
ದೇಶಾದ್ಯಂತ ವ್ಯಾಪಕವಾಗಿ ಪ್ರಚಾರ ಮಾಡಿದ್ದರು. ಯಾವುದೇ ಹಿಂಜರಿಕೆಯಿಲ್ಲದೆ ಪ್ರಧಾನಿ ಮೋದಿ ವಿರುದ್ಧ ನೇರ ದಾಳಿಯನ್ನು ಮಾಡುವ ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಅತ್ಯುತ್ತಮ ಆಯ್ಕೆಯಾಗುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಹುಲ್ ಗಾಂಧಿಯನ್ನು ಅನೇಕರು ಪ್ರಧಾನಿ ಹುದ್ದೆಗೆ ಒಮ್ಮತದ ಅಭ್ಯರ್ಥಿಯಾಗಿ ನೋಡುತ್ತಾರೆ. “ನಾವು ಒಟ್ಟಾಗಿ ಹೋರಾಡುತ್ತೇವೆ ಎಂದು ಇಂಡಿಯ ಬಣದವರಾದ ನಾವು ನಿರ್ಧರಿಸಿದ್ದದೇವೆ. ಈ ಬಣ ಚುನಾವಣೆಯಲ್ಲಿ ಗೆದ್ದ ನಂತರ ಪ್ರಧಾನಿ ಯಾರು ಎಂದು ಜಂಟಿಯಾಗಿ ನಿರ್ಧರಿಸಲಾಗುತ್ತದೆ.” ಎಂದು ಖರ್ಗೆ ಹೇಳಿದ್ದಾರೆ.

