ಲಕ್ನೋ: ಇಂದು ಸಬರ್ಮತಿ ಎಕ್ಸ್ಪ್ರೆಸ್ ರೈಲಿನ ಕನಿಷ್ಠ 20 ಬೋಗಿಳು ಹಳಿ ತಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ವಾರಣಾಸಿಯಿಂದ ಅಹಮದಾಬಾದ್ಗೆ ತೆರಳುತ್ತಿದ್ದ ಸಬರ್ಮತಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 19168) ರೈಲಿನ 20 ಬೋಗಿಗಳು ಶನಿವಾರ ಮುಂಜಾನೆ ಉತ್ತರ ಪ್ರದೇಶದ ಕಾನ್ಪುರ ಮತ್ತು ಭೀಮಸೇನ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಳಿಯಲ್ಲಿ ಬಿದ್ದಿದ್ದ ಬಂಡೆಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ, ಗಾಯ ಉಂಟಾಗಿಲ್ಲ. ಪ್ರಯಾಣಿಕರನ್ನು ಕಾನ್ಪುರಕ್ಕೆ ತಲುಪಿಸಲು ಭಾರತೀಯ ರೈಲ್ವೆ ಇಲಾಖೆ ಸ್ಥಳಕ್ಕೆ ಬಸ್ಸುಗಳನ್ನು ಕಳುಹಿಸಿದೆ ಮತ್ತು ಅಲ್ಲಿಂದ ಅಹಮದಾಬಾದ್ಗೆ ಪ್ರಯಾಣ ಮುಂದುವರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಕೂಡಲೇ ಅವಘಡ ನಡೆದ ಸ್ಥಳಕ್ಕೆ ಅಗ್ನಿಶಾಮಕ ವಾಹನ ಮತ್ತು ಆ್ಯಂಬುಲೆನ್ಸ್ ಧಾವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರೈಲ್ವೆ ರೈಲು ವಿಚಾರಣಾ ವೆಬ್ಸೈಟ್ ಪ್ರಕಾರ, ಶನಿವಾರ ಮುಂಜಾನೆ 2:29ಕ್ಕೆ ಕಾನ್ಪುರ ಸೆಂಟ್ರಲ್ ನಿಲ್ದಾಣದಿಂದ ಹೊರಟ ಸುಮಾರು 30 ನಿಮಿಷಗಳ ನಂತರ ರೈಲು ಹಳಿ ತಪ್ಪಿದೆ. ಬಂಡೆಯೊಂದು ಎಂಜಿನ್ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಇಂಟೆಲಿಜೆನ್ಸ್ ಬ್ಯೂರೋ ಮತ್ತು ಉತ್ತರ ಪ್ರದೇಶ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿರುವುದರಿಂದ ಘಟನಾ ಸ್ಥಳದಲ್ಲಿನ ಪುರಾವೆಗಳನ್ನು ಸಂರಕ್ಷಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಘಟನೆಯ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಹಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ ಮತ್ತು ಕೆಲವು ರೈಲುಗಳಿಗೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.