ಭುವನೇಶ್ವರ: ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಹಿಂದಿನಿಂದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 14 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ನಡೆದಿದೆ.
ಬೆಟನಾಟಿ ಪೊಲೀಸ್ ಠಾಣಾ ವ್ಯಾಪ್ತಿಯ ಬುದಿಖ್ಮರಿ ಬಳಿಯ ರಾಷ್ಟ್ರೀಯ ಹೆದ್ದಾರಿ 18ರಲ್ಲಿ ಘಟನೆ ಸಂಭವಿಸಿದೆ. ಸುಮಾರು 20 ಯಾತ್ರಾರ್ಥಿಗಳಿದ್ದ ಬಸ್ ಟ್ರಕ್ಗೆ ಡಿಕ್ಕಿ ಹೊಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಸ್ ಹೈದರಾಬಾದ್ನಿಂದ ಗಯಾ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಮೃತಪಟ್ಟವರ ಪೈಕಿ ಒಬ್ಬರನ್ನು ಹೈದರಾಬಾದ್ನ ಚಾರ್ಮಿನಾರ್ ಪ್ರದೇಶದ ಬಸ್ ಚಾಲಕ ಉದಯ್ ಸಿಂಗ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಬರಿಪಾಡಾದ ಪಂಡಿತ್ ರಘುನಾಥ್ ಮುರ್ಮು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚುವರಿ ಜಿಲ್ಲಾ ವೈದ್ಯಾಧಿಕಾರಿ ಬಿಜಯ್ ಕುಮಾರ್ ದಾಸ್ ಮಾತನಾಡಿ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದರು. ಗಾಯಗೊಂಡ 14 ಜನರು ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

