ನವದೆಹಲಿ: ಕಳೆದ ಬಾರಿಯ ಚುನಾವಣೆಯಲ್ಲಿ ಟಿಕೆಟ್ ವಂಚಿತ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡ ನಾಯಕರಿಗೆ ಈ ಬಾರಿ ಅವಕಾಶ ನೀಡಲು ಸಿಎಂ, ಡಿಸಿಎಂ ನಿರ್ಧರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪ್ರಬಲ ಪೈಪೊಟಿ ನಡುವೆ ಹಿರಿಯ ನಾಯಕರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ವಿಧಾನಸಭೆಯಲ್ಲಿ ಸೋಲನ್ನಪ್ಪಿದ್ದಾರೆ. ಈಗ ಮತ್ತೊಂದು ಅವಕಾಶ ನೀಡುವುದು ಕಷ್ಟ. ಪರಾಜಿತಗೊಂಡ ಅಭ್ಯರ್ಥಿಗಳಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ  ಟಿಕೆಟ್ ನೀಡದಿರಲು ಕಾಂಗ್ರೆಸ್  ನಿರ್ಧರಿಸಿದೆ.

ರಮನಾಥ್ ರೈ, ವಿನಯ್ ಕುಮಾರ್ ಸೊರಕೆ, ಪಿ.ಟಿ ಪರಮೇಶ್ವರ್ ನಾಯ್ಕ್, ರಮೇಶ್ ಕುಮಾರ್ ಸೇರಿದಂತೆ ಹಲವು ಪರಾರ್ಜಿತ ನಾಯಕರು ಪರಿಷತ್ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಮೂಲಗಳು ಹೇಳಿವೆ.

ಈ ಹಿನ್ನೆಲೆ ವಿಧಾನಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳಿಗೆ ಎರಡು ವರ್ಷಗಳ ಕಾಲ ಯಾವುದೇ ಹೊಸ ಅವಕಾಶಗಳನ್ನು ನೀಡದಿರಲು ಸಿಎಂ ಸಿದ್ದರಾಮಯ್ಯ  ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್  ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಜೊತೆಗೂ ಈ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರದಲ್ಲಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿದೆ.