ನವದೆಹಲಿ: ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸಂಸದೆ ಸಾಗರಿಕಾ ಘೋಷ್ ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಸಾಗರಿಕಾ ಘೋಷ್, “ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ನೈತಿಕ ಮಾನ್ಯತೆಯಿಲ್ಲ. ಹೀಗಾಗಿ, ನಾನು ಆ ಕಾರ್ಯಕ್ರಮವನ್ನು ಬಹಿಷ್ಕರಿಸುತ್ತಿದ್ದೇನೆ” ಎಂದಿದ್ದಾರೆ.

ಇಂದು ಸಂಜೆ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರ ಕೊನೆಯ 2 ಅವಧಿಗಿಂತ ಭಿನ್ನವಾಗಿ, ಅವರ ಮೂರನೇ ಅವಧಿಯು ಸಮ್ಮಿಶ್ರ ಸರ್ಕಾರವನ್ನು ಹೊಂದಿರುತ್ತದೆ.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 240 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. 272 ಬಹುಮತದ ಮಾರ್ಕ್ ಅನ್ನು ತಲುಪಲು 32 ಸ್ಥಾನಗಳ ಕೊರತೆಯಿದೆ. ಹೀಗಾಗಿ, ಮಿತ್ರಪಕ್ಷಗಳ ಸಹಕಾರದಿಂದ ಬಿಜೆಪಿ ಸರ್ಕಾರ ರಚಿಸಲಿದೆ.

ಪ್ರತಿಪಕ್ಷದ ರಾಜಕಾರಣಿಗಳಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಆಹ್ವಾನ ನೀಡಲಾಗಿದೆ. ಆದರೆ, ಸಾಗರಿಕಾ ಘೋಷ್ ಪ್ರಕಾರ, ನರೇಂದ್ರ ಮೋದಿ “ಜನರ ಜನಾದೇಶವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಆ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುವುದಿಲ್ಲ” ಎಂದು ಹೇಳಿದ್ದಾರೆ.

“ಗೌರವಾನ್ವಿತ ರಾಷ್ಟ್ರಪತಿಗಳೇ. ನಿಮ್ಮ ಆತ್ಮೀಯ ಆಹ್ವಾನಕ್ಕೆ ಧನ್ಯವಾದಗಳು. ಜನಾದೇಶವನ್ನು ಕಳೆದುಕೊಂಡಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನದ ನೈತಿಕ ನ್ಯಾಯಸಮ್ಮತತೆಯನ್ನು ವಿರೋಧ ಪಕ್ಷದಲ್ಲಿರುವ ನಾವು ಸ್ವೀಕರಿಸದ ಕಾರಣ ನಾನು ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಲು ವಿಷಾದಿಸುತ್ತೇನೆ” ಎಂದು ಸಾಗರಿಕಾ ಘೋಷ್ ಎಕ್ಸ್​ನಲ್ಲಿನ ಪೋಸ್ಟ್‌ನಲ್ಲಿ ಹೇಳಿದ್ದಾರೆ.