ನವದೆಹಲಿ: ‘ಉತ್ತರ ಪ್ರದೇಶದಲ್ಲಿ ನಾವು ಎಲ್ಲಾ 80 ಕ್ಷೇತ್ರಗಳನ್ನು ಗೆದ್ದಿದ್ದರೂ ಇವಿಎಂ ಅನ್ನು ನಾನು ನಂಬುವುದಿಲ್ಲ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.
ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ವೇಳೆ ಮಾತನಾಡಿದ ಅವರು, ವಿದ್ಯುನ್ಮಾನ ಮತಯಂತ್ರದ (ಇವಿಎಂ) ವಿಶ್ವಾಸರ್ಹತೆ ಕುರಿತಂತೆ ಪ್ರಶ್ನೆ ಎತ್ತಿದ್ದಾರೆ.
‘ನಿನ್ನೆ ದಿನ ಇವಿಎಂಗಳ ಬಗ್ಗೆ ನನಗೆ ನಂಬಿಕೆ ಇರಲಿಲ್ಲ. ಇಂದು ಕೂಡ ಇಲ್ಲ. ಉತ್ತರ ಪ್ರದೇಶದಲ್ಲಿ ನಾವು ಎಲ್ಲಾ 80 ಕ್ಷೇತ್ರಗಳನ್ನು ಗೆದ್ದಿದ್ದರೂ ಇವಿಎಂ ಅನ್ನು ನಾನು ನಂಬುವುದಿಲ್ಲ. ಇವಿಎಂಗಳ ಸಮಸ್ಯೆಗಳು ಇನ್ನು ಜೀವಂತವಾಗಿವೆ’ ಎಂದು ಹೇಳಿದ್ದಾರೆ.
ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ‘2024ರ ಲೋಕಸಭೆ ಚುನಾವಣೆಯು ದೇಶದಲ್ಲಿ ಕೋಮು ರಾಜಕೀಯಕ್ಕೆ ಅಂತ್ಯ ಹಾಡಿದೆ. ಈ ಚುನಾವಣಾ ಫಲಿತಾಂಶ ಇಂಡಿಯಾ ಮೈತ್ರಿಕೂಟದ ನೈತಿಕ ವಿಜಯವಾಗಿದೆ’ ಎಂದಿದ್ದಾರೆ.
‘ಚುನಾವಣಾ ಫಲಿತಾಂಶ ಪ್ರಕಟವಾದ ಜೂನ್ 4 ಭಾರತಕ್ಕೆ ಕೋಮು ರಾಜಕೀಯದಿಂದ ಮುಕ್ತಿ ಸಿಕ್ಕ ದಿನವಾಗಿದೆ. ದೇಶದಲ್ಲಿ ಕೋಮು ರಾಜಕೀಯವೂ ಶಾಶ್ವತವಾಗಿ ಅಂತ್ಯ ಕಂಡಿದೆ. ರಾಮಮಂದಿರ ನಿರ್ಮಾಣವಾಗಿರುವ ಅಯೋಧ್ಯೆಯ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿ ಸೋಲನುಭವಿಸಿರುವುದು ಮತದಾರರ ಬುದ್ಧಿವಂತಿಕೆಯನ್ನು ತೋರಿಸುತ್ತದೆ. ಬಿಜೆಪಿಯ ಸೋಲು ಶ್ರೀರಾಮನ ಆಶಯವೂ ಆಗಿರಬಹುದು’ ಎಂದು ಹೇಳಿದ್ದಾರೆ.