ಕಾರವಾರ: ಉತ್ತರ ಕನ್ನಡ ಜಿಲ್ಲೆಗೆ ಬೇರೆ ಜಿಲ್ಲೆ ಅಥವಾ ಬೇರೆ ರಾಜ್ಯದಿಂದ ಆಗಮಿಸುವ ವ್ಯಕ್ತಿಗಳ ಸಂಪೂರ್ಣ ಮಾಹಿತಿಗಳನ್ನು ಸಂಗ್ರಹ ಮಾಡುವಂತೆ ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಸೂಚನೆ ನೀಡಿದ್ದಾರೆ.
ಕೋವಿಡ್ 19 ಸಮುದಾಯಕ್ಕೆ ಹರಡುವುದನ್ನು ತಡೆಗಟ್ಟವ ನಿಟ್ಟಿನಲ್ಲಿ ಅಂಥವರ ಮೇಲೆ ತೀವ್ರ ನಿಗಾ ವಹಿಸಬೇಕಾಗಿದೆ. ಕಾರಣ ಪ್ರತಿ ಗ್ರಾಮಕ್ಕೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಆಗಮಿಸುವವರ ಮಾಹಿತಿಯನ್ನು ಕಲೆ ಹಾಕಲು ಪ್ರತಿ ಗ್ರಾಮ ಮಟ್ಟದಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಯ ಮೇಲ್ವಿಚಾರಣೆಯಲ್ಲಿ ತಂಡ ರಚನೆ ಮಾಡಲು ಆದೇಶ ನೀಡಿದ್ದಾರೆ.
ಈ ತಂಡದಲ್ಲಿ ಆಯಾ ಗ್ರಾಪಂ ವ್ಯಾಪ್ತಿಯ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು, ಬೀಟ್ ಪೊಲೀಸ್ ಹಾಗೂ ಇತರೇ ಎಲ್ಲ ಸರಕಾರಿ ನೌಕರರು ಒಳಗೊಂಡಿದ್ದಾರೆ. ಈ ತಂಡವು ಪ್ರತಿ ದಿನ ತಮ್ಮ ಕಾರ್ಯ ಕ್ಷೇತ್ರದ ವ್ಯಾಪ್ತಿಯಲ ಬೇರೆ ಜಿಲ್ಲೆ, ರಾಜ್ಯದಿಂದ ಬರುವಂಥ ವ್ಯಕ್ತಿಗಳ ಮಾಹಿತಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನೀಡಬೇಕು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯು ಈ ಮಾಹಿತಿ ನಿಗದಿತ ನಮೂನೆಯಲ್ಲಿ ತಯಾರಿಸಿ ಪ್ರತಿ ದಿನ ಸಾಯಂಕಾಲ ಇ-ಮೇಲ್ ಮೂಲಕ ತಹಸೀಲ್ದಾರ್ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಸಂಬಂಧಿಸಿದ ತಹಸೀಲ್ದಾರರು ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ತಾಲೂಕು ವ್ಯಾಪ್ತಿಯ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ತಂಡ ರಚನೆಯ ಮೇಲ್ವಿಚಾರಣೆಯನ್ನು ನಡೆಸಿ ವರದಿ ನೀಡಬೇಕು. ಈ ಆದೇಶ ಉಲ್ಲಂಘನೆ ಮಾಡಿದರೆ ಅವರ ವಿರುದಧ ಸಾಂಕ್ರಾಮಿಕ ರೋಗಗಳ ಕಾಯಿದೆ -1897 ವಿಪತ್ತು ನಿರ್ವಹಣಾ ಕಾಯಿದೆ 2005 ಭಾರತೀಯ ದಂಡ ನೀತಿ ಸಂಹಿತೆ -1860 ಮತ್ತು ದಂಡ ಪ್ರಕ್ರಿಯಾ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.