ಬೆಂಗಳೂರು: ಪ್ರವಾಹ ಪೀಡಿತ ಪ್ರದೇಶಗಳಾದ ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ ಹಾಗೂ ಗದಗ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆಯನ್ನು ಆ.25ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಡೆಸಲಿದ್ದಾರೆ.
ಅಂದು ಬೆಳಿಗ್ಗೆ 9ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣದ ಮೂಲಕ ಹೊರಡಲಿರುವ ಮುಖ್ಯಮಂತ್ರಿ ಬೆಳಗಾವಿ ಜಿಲ್ಲೆಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 10.15 ಕ್ಕೆ ತಲುಪಲಿದ್ದಾರೆ. ಅಲ್ಲಿಯೇ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಸಚಿವರು, ಶಾಸಕರು, ಸಂಸತ್ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ತದನಂತರ ಮಧ್ಯಾಹ್ನ 12.30ಕ್ಕೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಅಣೆÂಕಟ್ಟು ಆವರಣದ ಹೆಲಿಪ್ಯಾಡ್ಗೆ ಆಗಮಿಸುವ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ವಿಜಯಪುರ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳ ಸಚಿವರು, ಶಾಸಕರು, ಸಂಸತ್ ಸದಸ್ಯರು, ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ ಆಲಮಟ್ಟಿ ಅತಿಥಿ ಗೃಹದ ಸಭಾಂಗಣದಲ್ಲಿ ಸಭೆ ನಡೆಸಿ, 2.30ಕ್ಕೆ ವೈಮಾನಿಕ ಸಮೀಕ್ಷೆ ನಡೆಸುವರು.
ಅಂದೇ ಮಧ್ಯಾಹ್ನ 3.45 ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಸಂಜೆ 5 ಗಂಟೆಗೆ ಹಿಂದಿರುಗಲಿದ್ದಾರೆ.
ಕೋವಿಡ್-19 ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸದರಿ ಪ್ರವಾಸ ಕಾರ್ಯಕ್ರಮದಲ್ಲಿ ಅತಿ ಕಡಿಮೆ ಸಂಖ್ಯೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಭಾಗವಹಿಸುವ ಜೊತೆಗೆ ಕಡ್ಡಾಯವಾಗಿ ಮಾಸ್ಕ್ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮುಖ್ಯಮಂತ್ರಿಗಳ ಸಚಿವಾಲಯ ಸೂಚನೆ ನೀಡಿದೆ.