ಬೆಂಗಳೂರು : ಮುಂಬೈ ಕರ್ನಾಟಕ ವಿವಾದ ಇದ್ದಾಗಲೂ ಕಿತ್ತೂರು ಕರ್ನಾಟಕ ಎಂದು ಹೇಳಬೇಕು. ಮುಂದಿನ ಸಚಿವ ಸಂಪುಟದಲ್ಲಿ ಕಿತ್ತೂರು ಕರ್ನಾಟಕ ಘೋಷಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಜ್ಯಾದ್ಯಂತ ಇಂದು 66 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಕಂಠೀರ ಸ್ಟೇಡಿಯಂನಲ್ಲಿ ಕನ್ನಡ ರಾಜ್ಯೋತ್ಸದ ಹಿನ್ನೆಲೆಯಲ್ಲಿ ಧ್ವಜಾರೋಹಣ ಮಾಡಿ ಭಾಷಣ ಮಾಡಿದ್ದಾರೆ.
ಬೆಂಗಳೂರಿನ ಕಂಠೀರ ಸ್ಟೇಡಿಯಂನಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕವನ್ನಾಗಿ ಮಾಡಬೇಕೆಂದು ತೀರ್ಮಾನಿಸಿದ್ದೇವೆ.
ಭಾರತದಲ್ಲಿ ಕನ್ನಡ ಭಾಷೆಯು ಅತ್ಯಂತ ಪುರಾತನವಾದ ಭಾಷೆಯಾಗಿದೆ.ಎಲ್ಲಾ ರಂಗಗಳಲ್ಲಿಯೂ ಕನ್ನಡಕ್ಕೆ ಸ್ಥಾನ ಸಿಗಬೇಕು. ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ ಕನ್ನಡದಲ್ಲೇ ಮಾತನಾಡಬೇಕು. ಕನ್ನಡ ನಮ್ಮಲ್ಲರನ್ನು ಒಂದೂ ಗೂಡಿಸುವ ಶಕ್ತಿ ಹೊಂದಿದೆ. ಕನ್ನಡವೆಂಬ ತಾಯಿ ದೇವರನ್ನು ರಕ್ಷಿಸಬೇಕು. ಕನ್ನಡವನ್ನು ಹೆಮ್ಮರವಾಗಿ ಬೆಳೆಸಬೇಕು. ಭಾಷೆ ಸದೃಢವಾದರೆ ರಾಜ್ಯ ಶಕ್ತಿಶಾಲಿಯಾಗುತ್ತದೆ ಎಂದರು.
ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸುವುದು. ಕನ್ನಡ ಬಾರದವರಿಗೆ ಕನ್ನಡ ಕಲಿಸುವುದು. ವಿದ್ಯಾರ್ಥಿಗಳಿಗೆ ಎಲ್ಲಾ ಹಂತದಲ್ಲಿ ಕನ್ನಡ ಕಲಿಸುವುದು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕನ್ನಡ ಮತ್ತು ಕರ್ನಾಟಕ ಅಭಿವೃದ್ಧಿಯಾಗುತ್ತದೆ. ಹೊಸ ಶಿಕ್ಷಣ ನೀತಿಯಲ್ಲಿ ಕನ್ನಡಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಕನ್ನಡ ಮಾಧ್ಯಮದಲ್ಲಿ ತಾಂತ್ರಿಕ ಶಿಕ್ಷಣ ನೀಡಲಾಗುಉತ್ತದೆ. 80 ಐಟಿಐಗಳನ್ನು ಉನ್ನತ ದರ್ಜೆಗೆ ಏರಿಸಲಾಗಿದೆ ಎಂದು ಹೇಳಿದ್ದಾರೆ.