ಬೆಂಗಳೂರು: ಪಕ್ಷ ಸಂಘಟನೆ ಮತ್ತು ಪಕ್ಷದ ಚಟುವಟಿಕೆಗಳನ್ನು ನಡೆಸಲು ರೂಪುರೇಷೆ ಸಿದ್ದಪಡಿಸಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರಿ ನಿವಾಸ ಕಾವೇರಿಯನ್ನು ಖಾಲಿ ಮಾಡದೇ ಇರುವ ನಿರ್ಧಾರಕ್ಕೆ ಬಂದಿದ್ದಾರೆ. ಹಿಂದಿನ ಮೈತ್ರಿ ಸರ್ಕಾರದ ವೇಳೆ ಸಿದ್ದರಾಮಯ್ಯ ಅನುಸರಿಸಿದ್ದ ತಂತ್ರಗಾರಿಕೆ ಮೂಲಕ ಕಾವೇರಿಯನ್ನೇ ತಮ್ಮ ರಾಜಕೀಯ ಚಟುವಟಿಕೆ ತಾಣ ಮಾಡಿಕೊಳ್ಳಲು ಮುಂದಾಗಿದ್ದಾರೆ.
ಬಿಜೆಪಿಯಲ್ಲಿನ ವಯೋಮಿತಿ ಕಾರಣದಿಂದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಯಡಿಯೂರಪ್ಪ ಸಕ್ರೀಯ ರಾಜಕಾರಣದಲ್ಲಿ ಮುಂದುವರೆಯಲಿದ್ದಾರೆ. ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಪಡೆಯದೇ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಗಣೇಶ ಚತುರ್ಥಿ ಮುಗಿಯುತ್ತಿದ್ದಂತೆ ರಾಜ್ಯ ಪ್ರವಾಸ ಮಾಡಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕೊರೊನಾ ಮಾರ್ಗಸೂಚಿಯಲ್ಲಿ ಅವಕಾಶವಿರುವ ಸೀಮಿತ ವ್ಯವಸ್ಥೆ ಬಳಸಿಕೊಂಡೇ ಜಿಲ್ಲೆಗಳಿಗೆ ಭೇಟಿ ನೀಡಲು ಮುಂದಾಗಿರುವ ಯಡಿಯೂರಪ್ಪ ರಾಜ್ಯದಲ್ಲಿ ಪಕ್ಷ ಸಂಘಟನೆ ಬಲಪಡಿಸಲು ಸಿದ್ಧರಾಗಿದ್ದಾರೆ. ಬಿಜೆಪಿ ಸರ್ಕಾರಕ್ಕೆ 20 ತಿಂಗಳ ಸಮಯವಿದ್ದು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ರಾಜ್ಯ ಸುತ್ತಲು ಅಣಿಯಾಗುತ್ತಿದ್ದಾರೆ.