ಶ್ರೀರಂಗಪಟ್ಟಣ: ಕೆ.ಆರ್.ಎಸ್ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾವೇರಿ ಮಾತೆಗೆ ಪೂಜೆ ಸಲ್ಲಿಸುವ ಮೂಲಕ ಗುರುವಾರ ಬಾಗಿನ ಅರ್ಪಿಸಿದರು.
ಮೈಸೂರಿನ ಚಾಮುಂಡಿಬೆಟ್ಟದಿಂದ ಆಗಮಿಸಿದ ಅವರು ಮಧ್ಯಾಹ್ನ 12:45ಕ್ಕೆ ಜಲಾಶಯಕ್ಕೆ ಬಾಗಿನ ಅರ್ಪಿಸಿ, ನಂತರ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕಳೆದ ಒಂದು ತಿಂಗಳ ಹಿಂದೆ ಜಲಾಶಯ ತುಂಬದೇ ರಾಜ್ಯದಲ್ಲಿ ಆತಂಕ ಎದುರಾಗಿತ್ತು. ಪ್ರತಿ ದಿನ ಮಂಡ್ಯ ಜಿಲ್ಲೆಯ ಡಿಸಿಗೆ ಕರೆಮಾಡಿ ಜಲಾಶಯದ ಒಳಹರಿವಿನ ಪ್ರಮಾಣದ ಬಗ್ಗೆ ಮಾಹಿತಿ ಪಡೆಯುತ್ತಿದ್ದೆ. ಆದರೆ ವರುಣ ದೇವನ ಕೃಪೆಯಿಂದ 4 ದಿನಗಳ ಕಾಲ ವ್ಯಾಪಕ ಮಳೆ ಆಗಿರುವುದರಿಂದ ಎಲ್ಲ ಜಲಾಶಯಗಳು ಭರ್ತಿಯಾದವು. ತಮಿಳುನಾಡಿಗೆ ಕೊಡಬೇಕಾಗಿರುವ ನೀರು ಬಿಡಲಾಗಿದೆ, ಈ ಭಾಗದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಭರದಿಂದ ಸಾಗಿದೆ ಎಂದು ತಿಳಿಸಿದರು.
ಕೆಆರ್ಎಸ್ ಗ್ರಾಮವನ್ನು ಕಂದಾಯ ಗ್ರಾಮ ಎಂದು ಘೋಷಣೆ ಮಾಡಿ ಇಲ್ಲಿನ ಗ್ರಾಮಸ್ಥರಿಗೆ ಹಕ್ಕು ಪತ್ರ ಕೊಡಲು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಈ ಭಾಗದ ರೈತರು ಸಂಬಂಧಪಟ್ಟ ಕಂದಾಯ ಭೂಮಿದಾರರಿಗೆ ಹಿಡುವಳಿದಾರರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ನಡೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದರು.
ಕೆಲವು ಜಿಲ್ಲೆಗಳಲ್ಲಿ ಬರಗಾಲವಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಾಗಿದೆ, ಎರಡು ಸವಾಲುಗಳನ್ನು ಎದುರಿಸಬೇಕಿದೆ. ಕೇಂದ್ರ ಸಹಕಾರ ನೀಡುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ. ಸೆ.7 ಅಥವಾ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಬರುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.
ಇನ್ನು ಕೆಆರ್ಎಸ್ನ ಹೆಲಿಪ್ಯಾಡ್ನಲ್ಲಿ ಕೆ.ಆರ್.ಪೇಟೆ ಕ್ಷೇತ್ರದ ಜೆಡಿಎಸ್ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ ಜೊತೆ ಜೆಡಿಎಸ್ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ನಾಗಮಂಗಲ ಶಾಸಕ ಕೆ.ಸುರೇಶ್ಗೌಡ 5-10 ನಿಮಿಷಗಳ ಕಾಲ ಪರಸ್ಪರ ಮಾತುಕತೆ ನಡೆಸಿದ್ದು ವಿಶೇಷವಾಗಿತ್ತು.