ಮಡಿಕೇರಿ: ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡುಗಡೆ ಮಾಡಿರುವ 546 ಕೋಟಿ ರೂ.ಗಳನ್ನು 8 ಜಿಲ್ಲೆಗಳಿಗೆ ವಿನಿಯೋಗ ಮಾಡಲಾಗುವುದೆಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದೆಂದು ಮನವಿ ಮಾಡಿದ್ದಾರೆ.
ಕೊಡಗಿನ ಸಂತ್ರಸ್ತರಿಗಾಗಿ ಮನೆ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸುದಕ್ಕೆ ಮೊದಲು ಗರಗಂದೂರು ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ನೀಡಿರುವ ಅನುದಾನವನ್ನು ಎನ್ಡಿಆರ್ಎಫ್ ಮಾರ್ಗಸೂಚಿಯಂತೆ ವಿತರಣೆ ಮಾಡಲಾಗುವುದು, ಈ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರು.
ಅನುದಾನವನ್ನು ಮೂರು ತಿಂಗಳಲ್ಲಿ ಖರ್ಚು ಮಾಡಬೇಕಾಗಿದ್ದು, ರಾಜ್ಯದ 8 ಜಿಲ್ಲೆಗಳು ಇದರ ಪ್ರಯೋಜನ ಪಡೆಯಲಿವೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕೊಡಗಿನ ಸಂತ್ರಸ್ತರಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದಾನಿಗಳು ನೀಡಿರುವ ಹಣದ ಮೊತ್ತ 180 ಕೋಟಿ ರೂ.ಗಳಾಗಿದ್ದು, ಈ ಹಣವನ್ನು ಎಲ್ಲಿಯೂ ವ್ಯರ್ಥವಾಗದಂತೆ ತಮ್ಮ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರದ ಮೂಲಕವೇ ಸಂತ್ರಸ್ತರ ಪರಿಹಾರ ಕಾರ್ಯಗಳಿಗೆ ಖರ್ಚು ಮಾಡಲಾಗುವುದು. ಕೊಡಗಿನ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ಕೇಂದ್ರ ಸರ್ಕಾರದ ಮಾನದಂಡವನ್ನು ಆಧರಿಸಿ ಬೆಳೆ ಪರಿಹಾರವನ್ನು ನೀಡಲಾಗುವುದು. ಬಾಡಿಗೆ ಮನೆಯಲ್ಲಿರುವ ಸಂತ್ರಸ್ತರಿಗೆ ತಿಂಗಳಿಗೆ 10 ಸಾವಿರ ರೂ. ನಂತೆ 10 ತಿಂಗಳಿಗೆ ಒಟ್ಟು ಒಂದು ಲಕ್ಷ ರೂ. ಗಳನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯರುಗಳಾದ ಬೋಜೇಗೌಡ, ಸುನೀಲ್ ಸುಬ್ರಮಣಿ, ವೀಣಾಅಚ್ಚಯ್ಯ, ಮಾಜಿ ಸಚಿವ ಬಿ.ಎ.ಜೀವಿಜಯ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವು ಮಾದಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಬಿ.ಭರತೀಶ್ ಈ ಸಂದರ್ಭ ಹಾಜರಿದ್ದರು.