ಮಡಿಕೇರಿ : ಕೊಡಗು ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿದೆ . ಮಳೆಯಿಂದಾಗಿ ದೈನಂದಿನ ಜನಜೀವನ ಅಸ್ತವ್ಯಸ್ಥಗೊಂಡಿದೆ. ಹಟ್ಟಿಹೊಳೆ, ಮುಕ್ಕೊಡ್ಲು, ತಂತಿಪಾಲ ವ್ಯಾಪ್ತಿಯಲ್ಲಿ ನಿರಂತರ ಗಾಳಿ, ಮಳೆಯಾಗುತ್ತಿರುವುದರಿಂದ ಮುಖ್ಯ ರಸ್ತೆಯಲ್ಲಿ ಬರೆ ಕುಸಿಯುತ್ತಿದೆ. ಬೃಹತ್ ಮಣ್ಣಿನ ರಾಶಿ ರಸ್ತೆಯನ್ನು ಆವರಿಸಿರುವುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಹೊಳೆಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಹೊಳೆ ಬದಿ ನಿವಾಸಿಗಳು ಎಚ್ಚರಿಕೆಯಿಂದಿರುವಂತೆ ಶಾಸಕರು ಮನವಿ ಮಾಡಿದ್ದಾರೆ. ಧಾರಾಕಾರ ಮಳೆಯಿಂದ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಲೇ ಇದ್ದು, ಮಡಿಕೇರಿ ರಸ್ತೆ ಜಲಾವೃತಗೊಂಡಿದೆ. ಮಳೆ ಮುಂದುವರೆದರೆ ಮತ್ತಷ್ಟು ನೀರು ರಸ್ತೆಯನ್ನು ಆವರಿಸಲಿದ್ದು, ಸಂಚಾರ ವ್ಯತ್ಯಯಗೊಳ್ಳುವ ಸಾಧ್ಯತೆಗಳಿದೆ. ಇಂದು ಎರಡನೇ ಮೊಣ್ಣಂಗೇರಿಯಲ್ಲಿ ಭು ಕುಸಿತ ಸ್ಥಳಕ್ಕೆ ವೀರಾಜಪೇಟೆ ಕ್ಷೇತ್ರದ ಶಾಸಕ ಕೆ ಜಿ ಬೋಪಯ್ಯ ಅವರು ಭೇಟಿ ನೀಡಿ ಪರಿಶೀಲಿಸಿದರು.
ಕೊಡಗಿನ ಎಲ್ಲ ನದಿ , ಹೊಳೆಗಳಲ್ಲೂ ನೀರಿನ ಮಟ್ಟ ಏರಿಕೆ ದಾಖಲಿಸಿದೆ. ಹಾರಂಗಿ ಜಲಾಶಯಕ್ಕೆ ಇಂದು 20 ಸಾವಿರ ಕ್ಯೂಸೆಕ್ಸ್ ನಷ್ಟು ನೀರು ಹರಿದು ಬರುತಿದ್ದು ಅಷ್ಟೇ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಹವಾಮಾನ ಇಲಾಖೆಯು ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಮದ್ಯಾಹ್ನ 1 ಘಂಟೆಯಿಂದ ಶನಿವಾರ ಸಂಜೆ 6 ಘಂಟೆಯವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯಲ್ಲಿ ಅನೇಕ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬಹುತೇಕ ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೂರಾರು ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು ವಿದ್ಯುತ್ ಕಂಪೆನಿಗೆ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ವಿದ್ಯುತ್ ತಂತಿ ಸ್ಪರ್ಷಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸೊಮವಾರಪೇಟೆ ತಾಲ್ಲೂಕಿನ ಕೊಡ್ಲಿಪೇಟೆ ಹೋಬಳಿಯ ಬೆಂಬಳೂರಿನಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಜಾನಕಿ(60) ಎಂಬುವವರೇ ಮೃತಪಟ್ಟ ದುರ್ದೈವಿ. ಮನೆಯಲ್ಲಿ ಬಟ್ಟೆ ಒಣ ಹಾಕುತ್ತಿದ್ದ ಸಂದರ್ಭ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶನಿವಾರಸಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶುಕ್ರವಾರ ಮಡಿಕೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬು ಕುಮಾರ್ ಅವರು ಮಳೆ ಹಾನಿ ಸಂಬಂಧಿಸಿದಂತೆ ಈಗಾಗಲೇ ಅನುಮೋದನೆಗೊಂಡ ಹಳೇ ಕಾಮಗಾರಿಗಳನ್ನು ಆಗಸ್ಟ್, 20 ರೊಳಗೆ ಪೂರ್ಣಗೊಳಿಸಬೇಕು. ಇಲ್ಲದಿದ್ದಲ್ಲಿ ತನಿಖೆಗೆ ಶಿಫಾರಸ್ಸು ಮಾಡಲಾಗುವುದು ಎಂದು ಎಂಜಿನಿಯರ್ಗಳಿಗೆ ಎಚ್ಚರಿಸಿದ್ದಾರೆ.
ಹಳೇ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪೂರ್ಣಗೊಂಡ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬಿಲ್ಲನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಭ ಮಾಡಬಾರದು. ಜೊತೆಗೆ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಅವರು ಹೇಳಿದರು. ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಭಾರೀ ಮಳೆಯಿಂದ ಹಾನಿಯಾದಲ್ಲಿ ತಕ್ಷಣವೇ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು. ಮಳೆಯಿಂದ ಹಾನಿಯಾದಲ್ಲಿ ತಕ್ಷಣವೇ ಕಾರ್ಯ ಪ್ರವೃತ್ತರಾಗಬೇಕು. ಜಿಲ್ಲಾಧಿಕಾರಿಯವರಿಗೆ ವರದಿ ನೀಡಬೇಕು. ಕಾನೂನು ನಿಯಮಗಳನ್ನು ಪಾಲಿಸಬೇಕು ಎಂದು ಅವರು ಸೂಚಿಸಿದರು. ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಈಗಾಗಲೇ ಹಳೇ ಕಾಮಗಾರಿಗಳು ಹಾಗೂ ಪ್ರಸಕ್ತ ವರ್ಷದಲ್ಲಿ ಮಳೆಹಾನಿಗೆ ಸಂಬಂಧಿಸಿದಂತೆ ಅಗತ್ಯ ಕ್ರಮವಹಿಸಲಾಗಿದೆ. ಮುಂಗಾರು ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮವಹಿಸಿದೆ ಎಂದು ತಿಳಿಸಿದರು.