ಮಡಿಕೇರಿ : ಕರ್ನಾಟಕ ಬುಡಕಟ್ಟು ಸಂಶೋಧನಾ ಸಂಸ್ಥೆಯು ಕೊಡಗು ಮೂಲದ ಕೊಡವ ಜನಾಂಗಕ್ಕೆ ಬುಡಕಟ್ಟು ಸ್ಥಾನ ಮಾನ ನೀಡುವ ಕುರಿತು ಮಾಡಿರುವ ಸಮೀಕ್ಷೆಯು ಸರಿಯಾಗಿದೆಯೇ ಎಂದು ಪರಿಶೀಲಿಸುವಂತೆ ರಾಜ್ಯ ಹೈ ಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಈ ವಿಷಯದ ಬಗ್ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಲೇವಾರಿ ಮಾಡುವ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈಗಾಗಲೇ ನಡೆಸಿರುವ ಸಮೀಕ್ಷೆಯಲ್ಲಿ ಲೋಪ ಕಂಡು ಬಂದರೆ ಹೊಸ ಸಮೀಕ್ಷೆಯನ್ನು ನಡೆಸಲು ರಾಜ್ಯ ಸರ್ಕಾರ ಮುಕ್ತವಾಗಿದೆ’ ಎಂದು ತಿಳಿಸಿತು. ಕೊಡವ ಜನಾಂಗದ ಹಕ್ಕಿಗಾಗಿ ಹೋರಾಡುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ರಾಜ್ಯ ಹೈ ಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿ 2016ರ ಡಿಸೆಂಬರ್ 1ರಂದು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ನಿಗದಿಪಡಿಸಿರುವ ನಿಯಮಗಳ ಪ್ರಕಾರ ಸಮೀಕ್ಷೆ ನಡೆಸಿಲ್ಲ ಎಂದು ಆರೋಪಿಸಿತ್ತು. ಅರ್ಜಿಯಲ್ಲಿ ‘ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಆಧರಿಸಿ ಸಮೀಕ್ಷೆ ನಡೆಸಬೇಕು. ಆದರೆ, ಸಮೀಕ್ಷೆಗೆ ಸಿದ್ಧಪಡಿಸಿದ್ದ ನಮೂನೆಯೇ ದೋಷಪೂರಿತವಾಗಿದ್ದು ಅದರ ಆಧಾರದಲ್ಲಿ ನಡೆಸಿರುವ ಸಮೀಕ್ಷೆಯಿಂದ ಯಾವ ಪ್ರಯೋಜನವೂ ಆಗುವುದಿಲ್ಲ ಎಂದು ಆರೋಪಿಸಿತ್ತು.
ಆಗ 2021ರ ಜೂನ್ 5ರಂದು ಸಮೀಕ್ಷಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ ಎಂಬುದನ್ನು ಗಮನಿಸಿದ ಪೀಠ, ‘ಕೊಡವ ಸಮುದಾಯವನ್ನು ಬುಡಕಟ್ಟು ಸಮುದಾಯಗಳ ಪಟ್ಟಿಗೆ ಸೇರಿಸಲು ಸಮೀಕ್ಷಾ ವರದಿಯ ಹೊರತಾಗಿಯೂ ಹಲವು ಅಂಶಗಳನ್ನು ಪರಿಗಣಿಸಬೇಕಾಗುತ್ತದೆ. ಜೊತೆಗೆ ತನ್ನ ಆದೇಶದ ಪ್ರಕಾರ ಸಮೀಕ್ಷೆ ನಡೆದಿದೆಯೇ ಎಂಬುದನ್ನೂ ಸರ್ಕಾರ ಪರಿಶೀಲಿಸಬೇಕಾಗುತ್ತದೆ’ ಎಂದು ತಿಳಿಸಿತು.
ಕೊಡವ ಸಮುದಾಯಕ್ಕೆ ಬುಡಕಟ್ಟು ಸ್ಥಾನ ಮಾನ ; ಹೈ ಕೋರ್ಟ್ ನಿಂದ ಸರ್ಕಾರಕ್ಕೆ ನಿರ್ದೇಶನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.