. ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿರುವುದರ ಬೆನ್ನಲ್ಲೇ, ಅಸಮಾಧಾನ ಸ್ಪೋಟವಾಗಿದೆ. ತಮಗೆ ನೀಡಿರುವ ಖಾತೆಗೆ ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ತಮ್ಮ ಖಾತೆ ಬದಲಿಸದಿದ್ದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಶಾಸಕನಾಗಿ ಉಳಿಯುವ ಬಗ್ಗೆ ಆಲೋಚಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
‘ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಯಾವ ಖಾತೆ ಬೇಕೆಂದು ಕೇಳಿದ್ದೆ. ನನ್ನ ಮನವಿ ಪರಿಗಣಿಸುವುದಾಗಿ ಹೇಳಿದ್ದರು. ಆದರೆ, ಈಗ ಬೇರೆ ಖಾತೆ ಕೊಡಲಾಗಿದೆ. ಇದರಿಂದ ನನಗೆ ಅಸಮಾಧಾನವಾಗಿರುವುದು ನಿಜ’ ಎಂದು ಆನಂದ್ ಸಿಂಗ್ ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಚುಟುಕು ಸಂದರ್ಶನದಲ್ಲಿ ಹೇಳಿದ್ದಾರೆ.‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನೇ ಕಾರಣ. 2019ರಲ್ಲಿ ಮೊದಲು ರಾಜೀನಾಮೆ ನೀಡಿದ್ದೂ ನಾನೇ. ಎಂಟು ದಿನಗಳ ಬಳಿಕ ಒಬ್ಬೊಬ್ಬರಾಗಿ ರಾಜೀನಾಮೆ ನೀಡಿದರು. ಪರಿಣಾಮವಾಗಿ ಬಿಜೆಪಿ ಸರ್ಕಾರ ಬಂತು. ಇದನ್ನು ವರಿಷ್ಠರು ಗಮನದಲ್ಲಿ ಇಟ್ಟುಕೊಂಡು ಖಾತೆ ಹಂಚಿಕೆ ಮಾಡಬೇಕಾಗಿತ್ತು’ ಎಂದೂ ಅವರು ತಿಳಿಸಿದ್ದಾರೆ.
‘ಇಂಧನ ಮತ್ತು ಲೋಕೋಪಯೋಗಿ ಖಾತೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೆ’ ಎಂದು ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವ ಆನಂದ್ ಸಿಂಗ್ ಆಪ್ತರ ಬಳಿ ಹೇಳಿಕೊಂಡಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ಮಂತ್ರಿ ಬೊಮ್ಮಾಯಿ ಅವರು ಆನಂದ್ ಸಿಂಗ್ ನನ್ನ ಸ್ನೇಹಿತರಾಗಿದ್ದು ಅವರನ್ನು ಕರೆದು ಮಾತನಾಡುವುದಾಗಿ ತಿಳಿಸಿದ್ದಾರೆ.
ಖಾತೆ ಬದಲಿಸದಿದ್ದರೆ ರಾಜೀನಾಮೆ ಬೆದರಿಕೆ ಒಡ್ಡಿದ ಸಚಿವ ಆನಂದ್ ಸಿಂಗ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.