ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳ ನೀರಿನ ಗುಣಮಟ್ಟ ಹಾಗೂ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಉಚ್ಛ ನ್ಯಾಯಾಲಯವು ಕೆರೆಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಈಗಾಗಲೇ ನಿರ್ದೇಶನ ನೀಡಿದ್ದು ಅವುಗಳನ್ನು ಪಾಲಿಸಬೇಕು ಎಂದರು. ಸಣ್ಣ ನೀರಾವರಿ ಇಲಾಖೆಯಡಿ 98 ಕೆರೆಗಳು ಹಾಗೂ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 611 ಕೆರೆಗಳಿದ್ದು, ಎಲ್ಲಾ ಕೆರೆಗಳ ಸಂರಕ್ಷಣೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.
ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಅಪೆಕ್ಸ್ ಸಮಿತಿಗಳನ್ನು ರಚಿಸಿದ್ದು, ಸದಸ್ಯರು ಅಕ್ರಮ ಹಾಗೂ ಅತಿಕ್ರಮಣವನ್ನು ತಡೆಯುವ ಕಾರ್ಯ ಮಾಡಬೇಕು, ನಗರ ಪ್ರದೇಶಗಳಲ್ಲಿ ಕೊಳಚೆ ನೀರು ನೇರವಾಗಿ ಕೆರೆಗಳ ಒಡಲು ಸೇರಿ, ನೀರು ಮಲಿನವಾಗುತ್ತಿರುವುದನ್ನು ತಡೆಗಟ್ಟಲು ನಗರ ಪ್ರದೇಶದ ಬಡಾವಣೆಗಳಲ್ಲೇ ನೀರು ಇಂಗುವಂತೆ ಮಾಡಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದರು.
ಕೆರೆಗಳ ಸುತ್ತ 30 ಮೀಟರ್ ವ್ಯಾಪ್ತಿಯನ್ನು ಬಫರ್ ಪ್ರದೇಶವೆಂದು ಘೋಷಿಸಲಾಗಿದ್ದು, ಅತಿಕ್ರಮಣವನ್ನು ತೆರವುಗೊಳಿಸಬೇಕು ಹಾಗೂ ಯೋಜನಾ ಪ್ರಾಧಿಕಾರದ ಸಹಾಯ ಪಡೆದು ತಹಶೀಲ್ದಾರರು ಕೆರೆಗಳ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದರು. ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಕೆರೆಗಳ ಗಡಿ ಗುರುತಿಸಿ, ಕೆರೆಯಲ್ಲಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಿ, ಹೂಳೆತ್ತುವ ಕಾರ್ಯ ಮಾಡಬೇಕು. ಜೊತೆಗೆ, ಕೆರೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಸಲಹೆ ನೀಡಿದರು.
ಹೊಸಕೋಟೆಯ ಅಮಾನಿಕೆರೆ, ಚಿಕ್ಕಕೆರೆ, ದೇವನಹಳ್ಳಿ ಹಾಗೂ ವಿಜಯಪುರದ ಅಮಾನಿಕೆರೆ, ದೊಡ್ಡಬಳ್ಳಾಪುರದ ನಾಗರಕೆರೆ ಹಾಗೂ ನೆಲಮಂಗಲ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಉಪವಿಭಾಗಾಧಿಕಾರಿ ಅರುಳ್ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ತಹಶೀಲ್ದಾರರು, ಪೌರಾಯುಕ್ತರು, ಪುರಸಭೆ ಮುಖ್ಯಾಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.