ಬೆಂಗಳೂರು: ಸರ್ಕಾರಿ ಜಾಗ ಒತ್ತುವರಿ ಮಾಡಿ ಬಿಡದಿ ಬಳಿ ಈಗಲ್ಟನ್ ಗಾಲ್ಫ್ ರೆಸಾರ್ಟ್ ನಿರ್ಮಾಣ ಮಾಡಿರುವ ಚಾಮುಂಡೇಶ್ವರಿ ಬಿಲ್ಡ್ ಟೆಕ್ ಕಂಪನಿಗೆ ₹982 ಕೋಟಿ ದಂಡ ವಿಧಿಸಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
77 ಎಕರೆ 19 ಗುಂಟೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪದಲ್ಲಿ ಸರ್ಕಾರ ನೀಡಿದ್ದ ನೋಟಿಸ್ ಪ್ರಶ್ನಿಸಿ ಚಾಮುಂಡೇಶ್ವರಿ ಬಿಲ್ಡ್ ಟೆಕ್ ಕಂಪನಿ ಸಲ್ಲಿಸಿದ್ದ ತಕರಾರ ಅರ್ಜಿಯನ್ನು ನ್ಯಾಯಮೂರ್ತಿ ಜಿ. ನರೇಂದರ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ರಾಜ್ಯ ಸಚಿವ ಸಂಪುಟವು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರ ನಿಗದಿ ಮಾಡಿದೆ. ಪ್ರಸ್ತುತ ಮಾರುಕಟ್ಟೆ ದರ ₹12.25 ಕೋಟಿ ಆಗಿದ್ದು, ಅದನ್ನು ಒಪ್ಪುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.
‘ಕಂಪನಿಯು ಎರಡು ದಶಕಗಳಿಂದ ಸರ್ಕಾರದ ಭೂಮಿಯಲ್ಲಿ ಅನಧಿಕೃತವಾಗಿ ಸ್ವಾಧೀನದಲ್ಲಿದೆ. ಜತೆಗೆ ದಶಕಗಳ ಕಾಲ ಭೂ ವ್ಯಾಜ್ಯ ಮುಂದುವರಿಸಿಕೊಂಡು ಬಂದಿದೆ. ಇದು ಸರಿಯಾದ ಕ್ರಮ ಅಲ್ಲ. ಅಕ್ರಮ ಮುಚ್ಚಿಕೊಳ್ಳಲು ಈ ವ್ಯಾಜ್ಯವನ್ನು ಕಂಪನಿ ಅಸ್ತ್ರವಾಗಿ ಬಳಸಿಕೊಂಡಿದೆ’ ಎಂದು ಪೀಠ ಅಭಿಪ್ರಾಯಪಟ್ಟಿತು.
‘ಸಾರ್ವಜನಿಕ ಆಸ್ತಿಯನ್ನು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುವ ದುರುದ್ದೇಶದಿಂದ ಈ ಅರ್ಜಿ ಸಲ್ಲಿಸಲಾಗಿದೆ. ಇದು ಕಾನೂನು ಪ್ರಕ್ರಿಯೆಯ ದುರ್ಬಳಕೆ’ ಎಂದು ತಿಳಿಸಿದ ಪೀಠ, ಕಂಪನಿಯ ಅರ್ಜಿಯನ್ನು ವಜಾಗೊಳಿಸಿತು.