ಕಾರವಾರ:ನೆರೆ ಪ್ರವಾಹದಿಂದ ಕೊಂಚ ಸುಧಾರಿಸಿಕೊಳ್ಳುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಭಾಗದ ಜನರಿಗೆ ಇನ್ನೊಂದು ಗಂಡಾಂತರ ಎದುರಾಗಿದ್ದು, ಸಾವಿರಾರು ಎಕರೆ ಕೃಷಿ ಭೂಮಿಗೆ ಅಪಾರ ಪ್ರಮಾಣಲ್ಲಿ ನೀರು ನುಗ್ಗಿದೆ.
ಸಣ್ಣ ನೀರಾವರಿಯ ಯೋಜನೆ ಹೊಂದಿರುವ ಜಲಾಶಯವಾಗಿದ್ದು ಅದರ ಒಡ್ಡು ಒಡೆದು ಅಪಾರ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ಮುಂಡಗೋಡ ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗಿದ್ದು ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿರುವ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದೆ. ಅದರ ಒತ್ತಡದಿಂದ ಒಡ್ಡು ಒಡೆದು ಜಲಾಶಯದ ನೀರಿನಿಂದ ಕೃಷಿ ಭೂಮಿಗೆ ಹಾನಿಯಾಗಿದೆ. ಜನವಸತಿ ಪ್ರದೇಶಗಳಿಗೆ ಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.
ಮುಂಡಗೋಡದ ಚಿಗಳ್ಳಿ ಜಲಾಶಯಕ್ಕೆ ಹಾನಿಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದ್ದರಿಂದ ಜಿಲ್ಲೆಯ ಜನರು ಆತಂಕಗೊಂಡಿದ್ದರು. ಆದರೆ ಡ್ಯಾಮ್ ಒಡೆದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟ ಪಡಿಸಿದ ಬಳಿಕ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಕೆಳಭಾಗದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.