ಮಡಿಕೇರಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಕೊಡಗು-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕೆ ಹೊರತು ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾರೂ ಗೊಂದಲ ಸೃಷ್ಟಿಸಬಾರದು ಎಂದು ಜಾತ್ಯತೀತ ಜನತಾದಳದ ನೂತನ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಜಿಲ್ಲಾಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ನನಗೆ ನೀಡಿದ್ದು, ಹಿರಿಯರ ಆಜ್ಞೆಯನ್ನು ಪಾಲಿಸುವುದು ನನ್ನ ಕರ್ತವ್ಯ. ವರಿಷ್ಠರ ಸೂಚನೆಯಂತೆ ನಾನು ಜಿಲ್ಲಾಧ್ಯಕ್ಷ ಸ್ಥಾನ ವಹಿಸಿಕೊಂಡಿದ್ದೇನೆ. ಪಕ್ಷದಲ್ಲಿರುವ ಪ್ರತಿಯೊಬ್ಬರ ಸಲಹೆ ಸೂಚನೆಗಳನ್ನು ಪಡೆದೇ ಪಕ್ಷವನ್ನು ಬೆಳೆಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಹಿರಿಯರು ಹಾಗೂ ಜೆಡಿಎಸ್ ನಾಯಕರಾದ ಬಿ.ಎ.ಜೀವಿಜಯ ಅವರು ತಮ್ಮ ಪುತ್ರನನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕೆಂದು ಬಯಸಿದ್ದರು. ಆದರೆ ವರಿಷ್ಠರು ಆ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ನನ್ನನ್ನು ಕೂಡ ತಮ್ಮ ಪುತ್ರನೆಂದು ಭಾವಿಸಿ ಪಕ್ಷ ಸಂಘಟನೆಗೆ ಅಗತ್ಯ ಸಹಕಾರ, ಸಲಹೆ, ಸೂಚನೆ ನೀಡಿ ಪ್ರೋತ್ಸಾಹಿಸಿ ಎಂದು ಗಣೇಶ್ ಮನವಿ ಮಾಡಿದ್ದಾರೆ.