ಕೋಲಾರ: ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ತೆರಿಗೆಯನ್ನು ಸಮರ್ಪಕವಾಗಿ ವಸೂಲಿ ಮಾಡಬೇಕು ಎಂದು ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ಆರ್ ನಾರಾಯಣಗೌಡ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಂಗ ಸಭಾಂಗಣದಲ್ಲಿ ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ತೆರಿಗೆ ಹಣ ಕಡಿಮೆ ಆಗುತ್ತಿದ್ದು ಅಧಿಕಾರಿಗಳು ಗಮನ ಹರಿಸಬೇಕು, ಪ್ರತಿ ತಾಲ್ಲೂಕಿನ ಲೀಗಲ್ ಅಡ್ವೇಸರ್ ಗಳಿಂದ ಸರ್ಕಾರಕ್ಕೆ ಬರುವ ಆದಾಯ ಕುಂಠಿತಗೊಳ್ಳುತ್ತಿದೆ ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಯರಗೋಳ್ ಡ್ಯಾಂ ಯೋಜನೆ ಮುಕ್ತಾಯ ಹಂತದಲ್ಲಿದ್ದು, ಮುಂದಿನ ಜನವರಿ ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿದೆ. ಹಸಿಕಸ ಮತ್ತು ಒಣಕಸಕ್ಕೆ ಸಂಬಂಧಿಸಿದಂತೆ ಮಂಡ್ಯ ಮತ್ತು ತುಮಕೂರು ಜಿಲ್ಲೆಗಳು ಪ್ರಗತಿ ಸಾಧಿಸಿವೆ ಅದೇ ರೀತಿ ಕೋಲಾರ ಜಿಲ್ಲೆಯಲ್ಲಿಯೂ ಪ್ರಗತಿ ಸಾಧಿಸಬೇಕು ಎಂದರು.