News Karnataka Kannada
Sunday, April 28 2024
ಕರ್ನಾಟಕ

ನೀರಾವರಿಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ; ರಾಜ್ಯಪಾಲರಿಗೆ ಜೆಡಿಎಸ್‌ ಮನವಿ

Jds Party
Photo Credit :

ಬೆಂಗಳೂರು – ವಿವಿಧ ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಜೆಡಿಎಸ್‌ ಆರೋಪಿಸಿದ್ದು , ಮೇಕೆದಾಟು, ಮಹದಾಯಿ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಜೆಡಿಎಸ್ ಶಾಸಕರ ನಿಯೋಗ ಇಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು. ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸಭೆ ಸೇರಿದ್ದ ಜೆಡಿಎಸ್ ಶಾಸಕರು ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ತೆರಳಿ ರಾಜ್ಯಪಾಲರಿಗೆ ನಿಯೋಗ ಮನವಿ ಸಲ್ಲಿಸಿತು.
ನೀರಾವರಿ ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗಿದೆ. ಮನವಿಯ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಕಳುಹಿಸಿಕೊಡಲಾಗಿದೆ. ರಾಜ್ಯಪಾಲರ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೇಕೆದಾಟು, ಮಹದಾಯಿ, ಕೃಷ್ಣಾಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ.
ಮೇಕೆದಾಟು ಬಳಿ ಸಮನಾಂತರ ಜಲಾಶಯ ನಿರ್ಮಾಣ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ತಮಿಳುನಾಡಿನ ಒತ್ತಡಕ್ಕೆ ಮಣಿದು ಮಂಜೂರಾತಿ ನೀಡಿಲ್ಲ ಎಂದು ಹೇಳುತ್ತಿದೆ. ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ನ್ಯಾಯಾಧಿಕರಣ ಅವಾರ್ಡ್ ನೀಡಿದರೂ ಕೇಂದ್ರ ಸರ್ಕಾರ ಪ್ರಕರಣ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆ ಹಂತದಲ್ಲಿದೆ ಎಂಬ ನೆಪವೊಡ್ಡಿ ಅಧಿಸೂಚನೆ ಹೊರಡಿಸಿಲ್ಲ. ಕೃಷ್ಣ ನದಿ ನೀರು ಹಂಚಿಕೆ ವಿಚಾರದಲ್ಲಿ ನ್ಯಾಯಾಧಿಕರಣ ಅವಾರ್ಡ್ ನೀಡಿದ್ದರೂ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ.
ಈ ಮೂರು ಯೋಜನೆಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕೆಂದು ಇಂದು ರಾಜ್ಯಪಾಲರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಮಾಡಿದ್ದೇವೆ. ಈ ವಿಚಾರದಲ್ಲಿ ಯಾವ ರೀತಿ ಕೇಂದ್ರ ಸರ್ಕಾರ ಸ್ಪಂದಿಸಲಿದೆ ಎಂಬುದನ್ನು ಕಾದು ನೋಡಿ ಆ ನಂತರ ನಮ್ಮ ಮುಂದಿನ ನಿಲುವನ್ನು ತೆಗೆದುಕೊಳ್ಳುತ್ತೇವೆ ಎಂದರು.ಪ್ರಾದೇಶಿಕ ನೆಲಕಟ್ಟಿನ ಆಧಾರದ ಮೇಲೆ ರಾಜ್ಯದ ಹಿತಕ್ಕಾಗಿ ಹೋರಾಟ ನಡೆಸುತ್ತೇವೆ. ಕಳೆದ 2-3 ವರ್ಷಗಳಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಬಂದು ನೀರು ಸಮುದ್ರಕ್ಕೆ ಹೋಗುತ್ತಿದೆ. ನಮಗೆ ಹಂಚಿಕೆಯಾಗಿರುವ ನೀರಿನ ಪಾಲನ್ನು ಸದ್ಬಳಕೆ ಮಾಡಿಕೊಳ್ಳಲು ಆಗುತ್ತಿಲ್ಲ. ರಾಷ್ಟ್ರೀಯ ಪಕ್ಷಗಳಿಂದ ನೀರಾವರಿ ಯೋಜನೆ ವಿಚಾರದಲ್ಲಿ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಈ ವಿಚಾರದಲ್ಲಿ ಜನಜಾಗೃತಿ ಮೂಡಿಸುವ ಕೆಲಸವನ್ನು ಜೆಡಿಎಸ್ ಮಾಡಲಿದೆ ಎಂದು ಹೇಳಿದರು.
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವವಿದೆ. ಹೀಗಾಗಿ ಆದ್ಯತೆ ಮೇರೆಗೆ ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು