ಕೆ.ಆರ್.ಪೇಟೆ: ಕ್ಷುಲ್ಲಕ ಕಾರಣಕ್ಕಾಗಿ ಗ್ರಾಮ ಪಂಚಾಯಿತಿಯ ನೀರುಗಂಟಿಯ ಮೇಲೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಐಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.
ಬಣ್ಣನಕೆರೆ ಗ್ರಾಮದ ನೀರುಗಂಟಿ (ವಾಟರ್ಮ್ಯಾನ್) ರವಿ(25) ಮತ್ತು ಈತನ ಸ್ನೇಹಿತ ಹರ್ಷ(26) ಗಾಯಗೊಂಡವರಾಗಿದ್ದು ಇಬ್ಬರನ್ನೂ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ಗ್ರಾಮದ ಬೋರೇಗೌಡ ಹಾಗೂ ಸ್ವಾಮಿ ಎಂಬುವವರು ಚಾಕುವಿನಿಂದ ಹಲ್ಲೆ ನಡೆಸಿದ ಆರೋಪಿಗಳಾಗಿದ್ದಾರೆ.
ಕ್ಷುಲ್ಲಕ ಕಾರಣಕ್ಕಾಗಿ ವಾಟರ್ಮ್ಯಾನ್ ರವಿ ಮತ್ತು ಬೋರೇಗೌಡ, ಹಾಗೂ ಸ್ವಾಮಿ ನಡುವೆ ಗಲಾಟೆ ನಡೆಯುತ್ತಿತ್ತು. ಇದನ್ನು ಬಿಡಿಸಲು ಹೋದ ಹರ್ಷ ಹಾಗೂ ರವಿ ಅವರಿಗೆ ಚಾಕುವಿನಿಂದ ಹಲ್ಲೆ ನಡೆದಿದೆ. ಘಟನೆಯ ಹಿನ್ನೆಲೆಯಲ್ಲಿ ಬಣ್ಣನಕೆರೆ ಗ್ರಾಮದಲ್ಲಿ ಬೂದಿಮುಚ್ಚಿದ ಕೆಂಡದಂತಹ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದೆ. ಘಟನೆ ಕುರಿತು ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.