ಮೈಸೂರು: ರಾಜ್ಯ ಸರ್ಕಾರವು ಪಂಚಮಸಾಲಿ ಸಮಾಜಕ್ಕೆ ಮುಂದಿನ ಸೆ.30ರ ಒಳಗೆ 2ಎ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಸೂಕ್ತ ಸಮಯಕ್ಕೆ ಸೂಕ್ತ ಮುಖ್ಯಮಂತ್ರಿ ಬಂದಿದ್ದಾರೆ ಎಂದು ಹರ್ಷವ್ಯಕ್ತಪಡಿಸಿದ ಅವರು, ಈ ಹಿಂದೆ ಧರಣಿ ವೇಳೆ ಬಸವರಾಜ ಬೊಮ್ಮಾಯಿ ಗೃಹಸಚಿವರಾಗಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿ ಬೊಮ್ಮಾಯಿ 3 ಬಾರಿ ಗೆಲ್ಲಲು ನಮ್ಮ ಸಮಾಜ ಕಾರಣ. ಪಂಚಮಸಾಲಿ ಸಮುದಾಯಕ್ಕೆ ಸೇರಿದವರಿಗೆ ಮುಖ್ಯಮಂತ್ರಿ ಸ್ಥಾನ ಸಿಗದ ಕಾರಣ ಬೇಸರವಿದೆ. ಈ ಬೇಸರ ನಿವಾರಣೆ ಆಗಬೇಕಾದರೆ ಮೀಸಲಾತಿ ನೀಡಬೇಕು ಎಂದು ಸಲಹೆ ಮಾಡಿದರು. ಪಂಚಮಸಾಲಿ ಹಾಗೂ ಗೌಡ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬೃಹತ್ ಸಮಾವೇಶ ನಡೆಸಿ ನಮ್ಮ ಹಕ್ಕೊತ್ತಾಯ ಮಂಡಿಸಿದ್ದೆವು. ಈ ಬಗ್ಗೆ ಅಧಿವೇಶನದಲ್ಲಿ ಮಾತು ನೀಡಿದ್ದ ಸರ್ಕಾರವು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಆದರೆ ಬದಲಾದ ಕಾಲಘಟ್ಟದಲ್ಲಿ ಮುಖ್ಯಮಂತ್ರಿ ಬದಲಾಗಿದ್ದಾರೆ. ನಮ್ಮ ಹಿಂದೆ ನಡೆಸಿದ ಸಮಾವೇಶಕ್ಕೆ ಸಹಕರಿಸಿದ್ದ ಬಸವರಾಜ ಬೊಮ್ಮಾಯಿಯವರು ಈಗ ಸಿಎಂ ಆಗಿದ್ದಾರೆ. ಹಾಗಾಗಿ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳನ್ನು ಮತ್ತೆ ನೆನಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.