ತುಮಕೂರು: ಪತ್ನಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿಗೆ ಜಿಲ್ಲಾ ಪ್ರಧಾನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡವನ್ನು ವಿಧಿಸಿದೆ.
ಮಹಮ್ಮದ್ ಇಸ್ಮಾಯಿಲ್ ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ.
ಘಟನೆ ಹಿನ್ನೆಲೆ. 2017ರ ಜುಲೈ 5ರಂದು ಮಧ್ಯಾಹ್ನ ಇಸ್ಮಾಯಿಲ್ ಪತ್ನಿ ಜುಮೇರಾಬಾನುಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದರು.
ತನಿಖಾಧಿಕಾರಿಯಾದ ಸಬ್ ಇನ್ಸ್ಪೆಕ್ಟರ್ ನಿರ್ಮಲಾ ಅವರು ಮರಣ ಪೂರ್ವ ಹೇಳಿಕೆಯನ್ನು ವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಪಡೆದಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಜೇಂದ್ರ ಬಾದಾಮಿಕರ್ ಅವರು ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಕೆ.ಎಚ್.ಶ್ರೀಮತಿ ವಾದ ಮಂಡಿಸಿದ್ದರು.