ಬೆಂಗಳೂರು, ; ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲೂ ಮೈಸೂರು ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣ ಸುದ್ದಿಯಾಗುತ್ತಿದ್ದು, ತಪ್ಪಿತಸ್ಥ ಆರೋಪಿಗಳನ್ನು ತಕ್ಷಣವೇ ಬಂಧಿಸದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ಸೂದ್, ಮೈಸೂರು ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಉನ್ನತ ಪೊಲೀಸ್ ಅಧಿಕಾರಿಗಳ ಕಾರ್ಯ ವೈಖರಿಗೆ ಸಿಎಂ ತರಾಟೆ ತೆಗೆದುಕೊಂಡಿದ್ದಾರೆ.
ದೆಹಲಿ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಹಿಂತಿರುಗುತ್ತಿದ್ದಂತೆಯೇ ಪ್ರಕರಣದ ಬಗ್ಗೆ ಪ್ರವೀಣ್ಸೂದ್ ಅವರಿಂದ ಮಾಹಿತಿ ಪಡೆದ ಸಿಎಂ ಅವರು ಆರೋಪಿಗಳ ಸುಳಿವು ಪತ್ತೆಯಾಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆ ನಡೆದು ಈಗಾಗಲೇ ನಾಲ್ಕು ದಿನಗಳಾಗಿವೆ. ಕರ್ನಾಟಕದ ಮಾನ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗುತ್ತಿದೆ. ಈವರೆಗೂ ನಿಮಗೆ ಒಂದು ಸಣ್ಣ ಸುಳಿವು ಸಿಕ್ಕಿಲ್ಲ ಎಂದರೆ ಇದೇನ ಕಾರ್ಯವೈಖರಿ ಎಂದು ಪ್ರಶ್ನಿಸಿದ್ದಾರೆಂದು ತಿಳಿದುಬಂದಿದೆ.
ಈ ಘಟನೆ ಬಗ್ಗೆ ಸ್ವತಃ ಪ್ರಧಾನಮಂತ್ರಿ ಕಾರ್ಯಾಲಯ ಮತ್ತು ಕೇಂದ್ರ ಗೃಹ ಸಚಿವರ ಕಾರ್ಯಾಲಯವು ನನಗೆ ದೂರವಾಣಿ ಕರೆ ಮಾಡಿ ಮಾಹಿತಿ ಕೋರಿದೆ. ನಿಮ್ಮ ಪೊಲೀಸರು ಆರೋಪಿಗಳನ್ನು ಪತ್ತೆ ಮಾಡುವಲ್ಲೇ ವಿಳಂಬ ಮಾಡುತ್ತಿದ್ದಾರೆ ಎಂದರೆ ನಾನು ಏನು ಉತ್ತರ ಕೊಡಬೇಕೆಂದು ಬೊಮ್ಮಾಯಿ ಅವರು ಡಿಜಿಪಿ ಮೇಲೆ ಕಿಡಿಕಾರಿದ್ದಾರೆ.