ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಇತಿಹಾಸದಲ್ಲಿ ಬಿಜೆಪಿ ಪ್ರಥಮ ಬಾರಿಗೆ ಮೇಯರ್ ಪಟ್ಟವನ್ನು ಪಡೆದುಕೊಂಡಿದೆ. ಇದಕ್ಕೆ ಸಹಕಾರ ಸಚಿವರಾಗಿರುವ ಎಸ್.ಟಿ.ಸೋಮಶೇಖರ್ ಅವರ ಪಾತ್ರ ಬಹಳ ದೊಡ್ಡದಿದೆ. ಪಕ್ಷಕ್ಕಾಗಿ ಅವರ ದುಡಿಮೆ, ಶ್ರಮ ನಿಜಕ್ಕೂ ಸಾರ್ಥಕವಾಗಿದೆ. ಈ ಅವಕಾಶವನ್ನು ಪಕ್ಷ ಸದುಪಯೋಗಪಡಿಸಿಕೊಂಡು ಮೈಸೂರಿನಲ್ಲಿ ಮತ್ತಷ್ಟು ಅಭಿವೃದ್ಧಿಯನ್ನು ಮಾಡಿ ತೋರಿಸಲಿ ಎಂದು ಹಾರೈಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೆಚ್ಚುಗೆವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಶ್ಲಾಘನೆಯ ಮಾತುಗಳನ್ನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲ್, ಮೈಸೂರಿನಲ್ಲಿ ಬಿಜೆಪಿ ಪಾಲಿಗೆ ಹೊಸ ಇತಿಹಾಸ ಸೃಷ್ಟಿ ಮಾಡಿದೆ. ಪಕ್ಷಕ್ಕಾಗಿ ಸೇವೆ ಹೀಗೆಯೇ ಮುಂದುವರಿಯಲಿ ಎಂದಿದ್ದಾರೆ.
ಸಂಸದ ಪ್ರತಾಪ್ ಸಿಂಹ ಮಾತನಾಡಿ, ಇದೇ ಪ್ರಥಮ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟ ಒಲಿದಿರುವುದು ಸಂತಸ ತಂದಿದೆ. ಕೊನೆಗೂ ಬಹುವರ್ಷಗಳ ಕನಸು ಈಡೇರಿದಂತಾಗಿದೆ. ಇದಕ್ಕೆ ನಮ್ಮ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಕಾರ್ಯತಂತ್ರ ಅಡಗಿದೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.