ಮಡಿಕೇರಿ: ತಲಕಾವೇರಿ ಬಹ್ಮಕುಂಡಿಕೆಗೆ ಪ್ಲಾಸ್ಟಿಕ್ ಹೊದಿಕೆ ಹಾಕಿರುವುದಕ್ಕೆ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಇಷ್ಟು ವರ್ಷದವರೆಗೆ ಹಾಕದೆ ಮಳೆಗಾಲದಲ್ಲಿಯೂ ಪೂಜೆ ಮಾಡಿಕೊಂಡು ಬರಲಾಗುತ್ತಿತ್ತು. ಇದೀಗ ಇಲ್ಲಿ ನಡೆಯುವ ಪೂಜಾ ಕಾರ್ಯಕ್ರಮಕ್ಕೆ ಮಳೆಬಿದ್ದು ತೊಂದರೆಯಾಗುತ್ತದೆ ಎಂಬ ಹಿನ್ನಲೆಯಲ್ಲಿ ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ಇದು ಅಪಚಾರ ಎಂಬ ಆರೋಪವೂ ಕೇಳಿ ಬಂದಿದೆ.
ಈ ಪ್ಲಾಸ್ಟಿಕ್ ಹೊದಿಕೆಯನ್ನು ತೆರವು ಮಾಡಬೇಕೆಂಬ ಆಗ್ರಹ ಕೇಳಿ ಬಂದಿದೆ. ಪವಿತ್ರ ಕುಂಡಿಕೆಯ ಮೇಲ್ಭಾಗ ಅಳವಡಿಸಲಾಗಿರುವ ಪ್ಲಾಸ್ಟಿಕ್ ಹೊದಿಕೆಯನ್ನು ತಕ್ಷಣ ತೆರವುಗೊಳಿಸಲು ಕ್ರಮಕೈಗೊಳ್ಳುವಂತೆ ಕಾವೇರಿ ನದಿ ಸ್ವಚ್ಚತಾ ಆಂದೋಲನದ ಪ್ರಮುಖರು ದೇವಾಲಯ ಆಡಳಿತ ಅಧಿಕಾರಿಯನ್ನು ಆಗ್ರಹಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಕುಂಡಿಕೆ ಮೇಲ್ಭಾಗದಲ್ಲಿ ಪ್ಲಾಸ್ಟಿಕ್ ಅಳವಡಿಸಿದ್ದು ಈ ಮೂಲಕ ಭಕ್ತಾದಿಗಳಿಗೆ ಅಸಮಾಧಾನ ಉಂಟಾಗುವುದರೊಂದಿಗೆ ಹಲವು ಬಾರಿ ತಲಕಾವೇರಿ-ಭಾಗಮಂಡಲ ಪುನರ್ ಪ್ರತಿಷ್ಠಾಪನಾ ಸಮಿತಿಯ ಪ್ರಮುಖರು ಸೇರಿದಂತೆ ಜಿಲ್ಲೆಯ ಸಂಘಟನೆಗಳು ಇದನ್ನು ತೆರವುಗೊಳಿಸಲು ಆಗ್ರಹಿಸಿದ್ದರೂ ಯಾವದೇ ರೀತಿಯ ಕ್ರಮಕೈಗೊಳ್ಳದ ಬಗ್ಗೆ ಸಮಿತಿ ಆಕ್ರೋಶ ವ್ಯಕ್ತಪಡಿಸಿದ್ದು ತೀರ್ಥೋದ್ಭವಕ್ಕೂ ಮೊದಲೇ ತೆರವುಗೊಳಿಸುವಂತೆ ಒತ್ತಾಯಿಸಿದ್ದಾರೆ.
ಈ ನಿಟ್ಟಿನಲ್ಲಿ ಸಮಿತಿಯ ಸಂಚಾಲಕರಾದ ಎಂ.ಎನ್. ಚಂದ್ರಮೋಹನ್ ದೇವಾಲಯ ಆಡಳಿತ ಅಧಿಕಾರಿ ಸತೀಶ್ ಕುಮಾರ್ ಅವರಿಗೆ ಲಿಖಿತ ದೂರು ನೀಡಿದ್ದು ಅಲ್ಲದೆ ಕ್ಷೇತ್ರದ ತಕ್ಕ ಮುಖ್ಯಸ್ಥರು, ಕ್ಷೇತ್ರದ ಅರ್ಚಕರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದು ತಪ್ಪಿದಲ್ಲಿ ಭಕ್ತಾದಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವದು ಎಂದು ಎಚ್ಚರಿಸಿದ್ದಾರೆ.
ಪ್ಲಾಸ್ಟಿಕ್ ಹೊದಿಕೆಯನ್ನು ತೆರವುಗೊಳಿಸಲು ಆಡಳಿತ ಮಂಡಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಯಾವದೇ ರೀತಿಯ ಕ್ರಮಕೈಗೊಂಡಿಲ್ಲ ಎಂದು ಕ್ಷೇತ್ರದ ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ ಹೇಳಿದ್ದಾರೆ. ಬಹಳಷ್ಟು ಸಂಘಟನೆಯ ಪ್ರಮುಖರು ಪ್ಲಾಸ್ಟಿಕ್ ಹೊದಿಕೆ ತೆರವಿಗೆ ಆಗ್ರಹಿಸಿದ್ದಾರೆ.