ಮಂಡ್ಯ: ಸರ್ಕಾರ ರೈತರ ಕಲ್ಯಾಣಕ್ಕಾಗಿ ಹತ್ತು ಹಲವು ಯೋಜನೆಗಳನ್ನು ತಂದಿದ್ದೇವೆ, ಸಾಲ ಮನ್ನಾ ಮಾಡಿದ್ದೇವೆ ಎಂದು ಹೇಳುತ್ತಿದ್ದರೂ ಮಂಡ್ಯ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾಯುತ್ತಿರುವ ಪ್ರಕರಣಗಳು ಮಾತ್ರ ನಿಲ್ಲುತ್ತಲೇ ಇಲ್ಲ.
ವಾರಕ್ಕೆ ಒಬ್ಬರೋ ಇಬ್ಬರೋ ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈಗಾಗಲೇ ಜಿಲ್ಲೆಯಲ್ಲಿ ಸಾವಿರಾರು ಮಂದಿ ಸಾವನ್ನಪ್ಪಿದ್ದು, ಸಾಲಬಾಧೆಯಿಂದ ಸಾಯುತ್ತಿರುವ ಪ್ರಕರಣಗಳು ನಡೆಯುತ್ತಲೇ ಇದೆ. ಈ ಬಗ್ಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸದಿರುವುದು ಇಲ್ಲಿನ ರೈತರ ಆಕ್ರೋಶಕ್ಕೆ ಕಾರಣವಾಗಿದೆ. ರೈತರ ಸಹಕಾರದಿಂದ ಚುನಾವಣೆಯಲ್ಲಿ ಗೆದ್ದು ರೈತನಾಯಕರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ಅವರು ಆಗಾಗ್ಗೆ ಸರ್ಕಾರವನ್ನು ಎಚ್ಚರಿಸುವ ಕೆಲಸ ಮಾಡುತ್ತಿದ್ದರು.
ಅವರ ನಿಧನದ ನಂತರ ಸರ್ಕಾರವನ್ನು ಎಚ್ಚರಿಸುವ ಕೆಲಸವಾಗುತ್ತಿಲ್ಲ. ಎಲ್ಲರೂ ಚುನಾವಣೆಯತ್ತ ಗಮನಹರಿಸುವುದರಿಂದ ರೈತರ ಮತದತ್ತ ಚಿತ್ತ ಹರಿಸಿದ್ದಾರೆಯೇ ವಿನಃ ಅವರ ಸಮಸ್ಯೆಯತ್ತ ಗಮನಹರಿಸದಿರುವುದು ಆತ್ಮಹತ್ಯೆ ಪ್ರಕರಣ ಹೆಚ್ಚಲು ಕಾರಣವಾಗುತ್ತಿದೆ.
ಈ ನಡುವೆ ಸಾಲದ ಬಾಧೆ ತಾಳಲಾರದೆ ಮಂಡ್ಯ ತಾಲೂಕಿನ ಹುಲ್ಲುಕೆರೆಕೊಪ್ಪಲು ಗ್ರಾಮದ ಕೃಷ್ಣ (36) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ವ್ಯವಸಾಯಕ್ಕಾಗಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2 ಲಕ್ಷ, ಹುಲಿಕೆರೆಕೊಪ್ಪಲು ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ 50 ಸಾವಿರ, ಶ್ರೀರಾಮ್ ಚಿಟ್ಸ್ ಹಣಕಾಸು ಸಂಸ್ಥೆಯಲ್ಲಿ 2.80 ಲಕ್ಷ ಟ್ರ್ಯಾಕ್ಟರ್ ಸಾಲ ಸೇರಿದಂತೆ ಸಂಘ ಸಂಸ್ಥೆಗಳಿಂದ 6 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರಂತೆ. ಈ ನಡುವೆ ಸಾಲಗಾರರ ಕಾಟ ತಾಳಲಾರದೆ ಜಮೀನಿನಲ್ಲೇ ವಿಷ ಸೇವಿಸಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಅಸ್ವಸ್ಥನಾಗಿದ್ದ ಆತನನ್ನು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲು ಕರೆತರುತ್ತಿದ್ದ ವೇಳೆ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು. ಈ ಸಂಬಂಧ ಶಿವಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ