News Karnataka Kannada
Saturday, May 11 2024
ಕರ್ನಾಟಕ

ಮಸೂದೆಗಳು ಕೃಷಿಕರ ಹಿತ ಕಾಯಲಿದೆ : ಕೊಡಗು ಬಿಜೆಪಿ ಸಮರ್ಥನೆ

Photo Credit :

ಮಸೂದೆಗಳು ಕೃಷಿಕರ ಹಿತ ಕಾಯಲಿದೆ : ಕೊಡಗು ಬಿಜೆಪಿ ಸಮರ್ಥನೆ

ಮಡಿಕೇರಿ: ಕೃಷಿಕರು ಮತ್ತು ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರ ಸರ್ಕಾರ ಮಹತ್ವದ ಮಸೂದೆಗಳನ್ನು ಜಾರಿಗೆ ತಂದಿದ್ದು, ಇವುಗಳನ್ನು ರೈತಾಪಿ ವರ್ಗಕ್ಕೆ ಅರ್ಥೈಸಿಕೊಡುವ ಬದಲು ರಾಜಕೀಯ ಕಾರಣಕ್ಕಾಗಿಯೇ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸುತ್ತಿವೆ ಎಂದು ಜಿಲ್ಲಾ ಬಿಜೆಪಿ ಟೀಕಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅವರು ವಿರೋಧಿಸುವುದಕ್ಕಾಗಿಯೇ ವಿರೋಧ ವ್ಯಕ್ತಪಡಿಸುತ್ತಿರುವ ವಿರೋಧ ಪಕ್ಷಗಳು ರೈತರ ಹಾದಿ ತಪ್ಪಿಸುವ ಯತ್ನದಲ್ಲಿ ತೊಡಗಿವೆ. ಸದನದಲ್ಲಿ ಮಸೂದೆಗಳ ಬಗ್ಗೆ ಆರೋಗ್ಯಕರ ಚರ್ಚೆ ನಡೆಸದೆ ಗೂಂಡಾ ಪ್ರವೃತ್ತಿ ಪ್ರದರ್ಶಿಸಿವೆ ಎಂದು ಆರೋಪಿಸಿದರು.

ಕೋವಿಡ್ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರ ರೈತರ ಪರವಾಗಿ ವಿಶೇಷ ಕಾಳಜಿ ತೋರಿ ಮಸೂದೆಗಳಿಗೆ ಅನುಮೋದನೆ ನೀಡಿದೆ.

ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆಯನ್ವಯ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ತಮಗಿಷ್ಟ ಬಂದ ಕಡೆ ಕೃಷಿ ಉತ್ಪನ್ನ ಮಾರಾಟ ಹಾಗೂ ಖರೀದಿ ಮಾಡುವ ಸ್ವಾತಂತ್ರವನ್ನು ನೀಡಲಾಗಿದೆ. ಪರ್ಯಾಯ ವ್ಯಾಪಾರ ವ್ಯವಸ್ಥೆ ಮೂಲಕ ಬೆಳೆಗಳ ನ್ಯಾಯಯುತ ದರ ನಿಗಧಿಪಡಿಸಲು ಅವಕಾಶ, ಕೃಷಿ ಉತ್ಪನ್ನಗಳ ಪಾರದರ್ಶಕ, ತಡೆರಹಿತ ಅಂತರರಾಜ್ಯ ಹಾಗೂ ರಾಜ್ಯದೊಳಗಿನ ವ್ಯಾಪಾರಕ್ಕೆ ಉತ್ತೇಜನ ನೀಡಲಾಗಿದೆ. ಉತ್ಪನ್ನದ ಆನ್‍ಲೈನ್ ವ್ಯಾಪಾರಕ್ಕೆ (ಇ-ಟ್ರೇಡಿಂಗ್) ಒತ್ತು ನೀಡಲು ಕಾನೂನಾತ್ಮಕ ಚೌಕಟ್ಟನ್ನು ಅಳವಡಿಸಲಾಗಿದೆ.

ರೈತರ (ಕಲ್ಯಾಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ ಮಸೂದೆಯಲ್ಲಿ ಕೃಷಿ ಉದ್ಯಮ ಸಂಸ್ಥೆಗಳು, ಸಗಟು ವ್ಯಾಪಾರಿಗಳು, ರಫ್ತುದಾರರು, ಚಿಲ್ಲರೆ ವ್ಯಾಪಾರಿಗಳೊಂದಿಗೆ ವಹಿವಾಟು ನಡೆಸಲು ರೈತರಿಗೆ ಭದ್ರತೆ ಹಾಗೂ ಪ್ರೋತ್ಸಾಹ ನೀಡುವ ಕೃಷಿ ಒಪ್ಪಂದದ ರಾಷ್ಟ್ರೀಯ ಚೌಕಟ್ಟು ನಿರ್ಮಿಸಲು ಧೈರ್ಯವನ್ನು ತುಂಬಲಾಗಿದೆ. ನ್ಯಾಯಯುತ ದರ ಚೌಕಟ್ಟಿನೊಳಗೆ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಕೃಷಿ ಸೇವೆಗಳನ್ನು ಒದಗಿಸುವ ಅವಕಾಶ ನೀಡಲಾಗಿದೆ.

ಈ ಎರಡು ಮಸೂದೆಗಳು ದೇಶದ ಕೃಷಿ ವಲಯದಲ್ಲಿ ಕ್ರಾಂತಿ ಸೃಷ್ಟಿಸಲಿದೆ ಮತ್ತು ರೈತ ಸಮುದಾಯಕ್ಕೆ ಸಹಕಾರಿಯಾಗಲಿದೆ ಎಂದು ರಾಬಿನ್ ದೇವಯ್ಯ ವಿಶ್ವಾಸ ವ್ಯಕ್ತಪಡಿಸಿದರು.

 ಕೃಷಿ ವಲಯದಿಂದ ದೇಶಕ್ಕಿರುವ ನಿರೀಕ್ಷೆ ಮತ್ತು ಅಗತ್ಯತೆಯನ್ನು ಪೂರೈಸಲು ಕೃಷಿ ಮಸೂದೆಗಳು ಪೂರಕ ವಾತಾವರಣವನ್ನು ಸೃಷ್ಟಿಸಲಿವೆ. ಇದರಿಂದ ಉತ್ತಮ ಬೆಳೆ ಬೆಳೆಯುವತ್ತ ರೈತರು ಪ್ರೇರಿತರಾಗುತ್ತಾರೆ, ಹೆಚ್ಚು ಇಳುವರಿ ಪಡೆದರೆ, ರೈತರ ಆದಾಯವೂ ಸಹಜವಾಗಿ ಹೆಚ್ಚಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೃಷಿ ಮೋರ್ಚಾದ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಶಿವಚಾಳಿಯಂಡ ಜಗದೀಶ್ ಹಾಗೂ ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಕಟ್ಟೇರ ಈಶ್ವರ್ ತಿಮ್ಮಯ್ಯ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು