ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಾಜಿ ರಾಷ್ಟ್ರಪತಿ ದಿ.ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪ್ರಣಬ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಪ್ರಣಬ್ ಮುಖರ್ಜಿ ಅವರು ಸ್ವಾತಂತ್ರ್ಯ ಹೋರಾಟವನ್ನು ಬಾಲ್ಯದಲ್ಲಿ ಕಂಡವರು. ಸಣ್ಣ ವಯಸ್ಸಿನಲ್ಲೇ ಜನಪ್ರತಿನಿಧಿಯಾಗಿ ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದವರು ಎಂದು ಬಣ್ಣಿಸಿದರು.
ತಾವು ಸಚಿವರಾಗಿದ್ದ ಅವಧಿಯಲ್ಲಿ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮುಖರ್ಜಿ ಅವರು ಶಿಕ್ಷಕರಾಗಿ, ವಕೀಲರಾಗಿ, ಅಂಚೆ ಇಲಾಖೆ ನೌಕರರಾಗಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದು, ದೇಶದ ಇತಿಹಾಸದ ಪುಟದಲ್ಲಿ ಉಳಿದುಕೊಂಡಿದ್ದಾರೆ ಎಂದರು.
ಪ್ರಣಬ್ ಅವರ ನಾಯಕತ್ವದ ಗುಣಗಳನ್ನು ಕಾಂಗ್ರೆಸ್ನ ಪ್ರತಿಯೊಬ್ಬ ಕಾರ್ಯಕರ್ತ ಮೈಗೂಡಿಸಿಕೊಳ್ಳಬೇಕೆಂದು ಮಂಜುನಾಥ್ ಕುಮಾರ್ ಕರೆ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ವೀಣಾಅಚ್ಚಯ್ಯ ಮಾತನಾಡಿ, ಪ್ರಣಬ್ ಮುಖರ್ಜಿ ಅವರು ಕಾಂಗ್ರೆಸ್ ಪಕ್ಷದ ಧೀಮಂತ ನಾಯಕರಾಗಿದ್ದರು. ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ದೇಶದ ಬಲವನ್ನು ಹೆಚ್ಚಿಸಿದ ವ್ಯಕ್ತಿಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಈ ದೇಶಕ್ಕೆ ಅವರು ನೀಡಿದ ಕೊಡುಗೆ ದೊಡ್ಡದು ಎಂದರು.