ಗದಗ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಸಂದರ್ಭದಲ್ಲಿ ರಾಜ್ಯ ಮಟ್ಟದ ಸಮಾರಂಭವು ಸೋಮವಾರ ಜುಲೈ 27ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದೆ.
ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಈ ಕಾರ್ಯಕ್ರಮವು ಏಕಕಾಲಕ್ಕೆ ಬಿತ್ತರಗೊಳ್ಳಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರ ಕಚೇರಿಯು ಎಲ್ಲ ಜಿಲ್ಲಾಡಳಿತಗಳೊಡನೆ ಸಮನ್ವಯ ಸಾಧಿಸಿ ಕಾರ್ಯಕ್ರಮದ ನೇರ ಪ್ರಸಾರ ಆಯೋಜಿಸಿದೆ.
ಗದಗ ಜಿಲ್ಲೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ವರ್ಚುವಲ್ ಪ್ಲಾಟ್ಫಾರಂ ಮೂಲಕ ದಿ.27 ಸೋಮವಾರ ಮುಂಜಾನೆ 11 ಗಂಟೆಯ ಕಾರ್ಯಕ್ರಮದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ಒಂದು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಆಗಬೇಕಾದ ಕೆಲಸಗಳು, ಪ್ರವಾಹ ಪರಿಹಾರ ಮತ್ತು ಕೊವಿಡ್-19 ಸೋಂಕು ನಿಯಂತ್ರಣ ಸೇರಿದಂತೆ ಅನೇಕ ವಿಷಯಗಳ ಕುರಿತು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡುವರು. ವಿವಿಧ ಯೋಜನೆಗಳ ಜಿಲ್ಲಾ ಫಲಾನುಭವಿಗಳೊಂದಿಗೆ ಅವರು ಸಂವಾದ ನಡೆಸಲಿದ್ದಾರೆ.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೇಂದ್ರಕಚೇರಿ ಹೊರತಂದಿರುವ ರಾಜ್ಯ ಸರಕಾರದ ವರ್ಷದ ಸಾಧನೆಯ ವಿವರಗಳ ಸವಾಲುಗಳ ಒಂದು ವರ್ಷ ಪರಿಹಾರದ ಸ್ಪರ್ಶ ಪುಸ್ತಕವನ್ನು ಮುಖ್ಯಮಂತ್ರಿಗಳು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಬಿಡುಗಡೆ ಮಾಡುವರು.
ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಸಂಸದರು, ಎಲ್ಲ ಶಾಸಕರು, ಜನಪ್ರತಿನಿಧಿಗಳು, ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ವಿವಿಧ ಯೋಜನೆಗಳ ಫಲಾನುಭವಿಗಳು, ಮಾಧ್ಯಮ ಪ್ರತಿನಿಧಿಗಳು ಗದಗ ಜಿಲ್ಲಾಡಳಿತ ಮುಖ್ಯ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸುವರು.