ಕಲ್ಬುರ್ಗಿ: ರೈತರ ಖಾತೆಗೆ ನೇರವಾಗಿ ನಗದು ಹಾಕಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದರೂ ರಾಜ್ಯದಲ್ಲಿರುವ ಕಾಂಗ್ರೆಸ್-ಜೆಡಿಎಸ್ ಸರ್ಕಾರವು ಇದಕ್ಕೆ ಅಡ್ಡಿಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪ ಮಾಡಿದರು.
ಕಲ್ಬುರ್ಗಿಯಲ್ಲಿರುವ ನೂತನ ವಿದ್ಯಾಲಯ ಮೈದಾನದಲ್ಲಿ ಬಿಜೆಪಿಯ ಬೃಹತ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ರಾಜ್ಯದ ಸಮ್ಮಿಶ್ರ ಸರ್ಕಾರವು ಸಂಪೂರ್ಣವಾಗಿ ರೈತ ವಿರೋಧಿಯಾಗಿದೆ. ರೈತ ಪರ ಯೋಜನೆಗಳಿಗೆ ರಾಜ್ಯ ಸರ್ಕಾರವು ಅಡ್ಡಗೋಡೆಯಾಗಿದೆ. ರೈತರ ಖಾತೆಗೆ ಹಣ ಜಮೆ ಮಾಡಲು ಕುಮಾರಸ್ವಾಮಿ ಸರ್ಕಾರ ಪಟ್ಟಿಯನ್ನೇ ಕೊಟ್ಟಿಲ್ಲ ಎಂದು ರಾಜ್ಯ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿದರು.
ಕೇಂದ್ರ ಸರ್ಕಾರದ ಒಂದು ರೂಪಾಯಿ ಕೂಡ ರೈತರ ಖಾತೆ ನೇರವಾಗಿ ಹೋಗಲಿದೆ. ಹಿಂದೆ ನಕಲಿ ದಾಖಲೆಗಳನ್ನು ನೀಡಿ ಭ್ರಷ್ಟಾಚಾರ ನಡೆಸುತ್ತಿದ್ದರು. ಇನ್ನು ಕಳ್ಳರ ಅಂಗಡಿ ಬಂದ್ ಆಗಲಿದೆ ಎಂದು ಪ್ರತಿಪಕ್ಷಗಳ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.
ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಆದರೆ ಇದುವರೆಗೆ ರೈತರ ಸಾಲ ಮನ್ನಾ ಮಾಡಿಲ್ಲ. ಕರ್ನಾಟಕ ಸರ್ಕಾರ ರೈತ ವಿರೋಧಿಯಾಗಿದೆ ಎಂದು ಹೇಳಿದರು.