ಮಂಗಳೂರು: ಮಣ್ಣು ಕುಸಿದು ರೈಲು ಸಂಚಾರ ಸ್ಥಗಿತಗೊಂಡಿರುವ ಘಟನೆ ನಡೆದಿದೆ. . ನಗರದ ಹೊರವಲಯದ ಕುಲಶೇಖರ ಬಳಿ ತಡೆಗೋಡೆ ಸಹಿತ ಮಣ್ಣು ರೈಲು ಹಳಿಯ ಮೇಲೆ ಬಿದ್ದಿದ್ದು ಕೊಂಕಣ ರೈಲು ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿದೆ.
ಮಂಗಳೂರು ಜಂಕ್ಷನ್–ತೋಕೂರು ನಿಲ್ದಾಣಗಳ ನಡುವೆ ಈ ಘಟನೆ ನಡೆದಿದ್ದು, ಮಂಗಳೂರು ಮೂಲಕ ಕೊಂಕಣ ರೈಲು ಸಂಪರ್ಕಿಸುವ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಮುಂಬೈಯಿಂದ ಮಂಗಳೂರಿಗೆ ಬರುವ ರೈಲುಗಳು ತೋಕೂರು ನಿಲ್ದಾಣದವರೆಗೆ ಮಾತ್ರ ಸಂಚರಿಸಿದ್ದು, ಅಲ್ಲಿಂದಲೇ ಮರಳಿ ಮುಂಬೈಗೆ ಪ್ರಯಾಣಿಸಿವೆ. ಮುಂಬೈಗೆ ತೆರಳುವ ಮತ್ಸ್ಯಗಂಧಾ ಎಕ್ಸ್ಪ್ರೆಸ್ ರೈಲನ್ನು ಮಂಗಳೂರು ರೈಲ್ವೆ ನಿಲ್ದಾಣದಲ್ಲಿಯೇ ನಿಲುಗಡೆ ಮಾಡಲಾಗಿದೆ.
ಪಾಲಕ್ಕಾಡ್ ವಿಭಾಗಕ್ಕೆ ಸೇರಿದ ಕುಲಶೇಖರ ಸುರಂಗ ಮಾರ್ಗ ಸಮೀಪ ತಡೆಗೋಡೆ ಕುಸಿದಿದೆ. ಎರಡು ವರ್ಷದ ಹಿಂದೆಯೂ ಇದೇ ಜಾಗದಲ್ಲಿ ಮಣ್ಣು ಕುಸಿದು ಎರಡು ದಿನ ರೈಲು ಸಂಚಾರ ಸ್ಥಗಿತವಾಗಿತ್ತು. ಬಳಿಕ ಮಣ್ಣು ಕುಸಿಯುವ ಜಾಗದಲ್ಲಿ ತಡೆಗೋಡೆ ನಿರ್ಮಿಸಲಾಗಿತ್ತು.
ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ತಡೆಗೋಡೆಯಲ್ಲಿ ಬಿರುಕು ಬಿಟ್ಟು, ಹಳಿ ಮೇಲೆ ಬಿದ್ದಿದೆ. ಸ್ಥಳಕ್ಕೆ ಪಾಲಕ್ಕಾಡ್ ವಿಭಾಗದ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಳಿಯಲ್ಲಿ ಬಿದ್ದಿರುವ ಕಲ್ಲು– ಮಣ್ಣು ತೆರವು ಮಾಡುವ ಕಾರ್ಯ ನಡೆಯುತ್ತಿದೆ. ಆದಷ್ಟು ಶೀಘ್ರದಲ್ಲಿಯೇ ರೈಲುಗಳ ಓಡಾಟ ಆರಂಭಿಸಲಾಗುವುದು ಎಂದು ಎಂದು ತಿಳಿಸಿದ್ದಾರೆ.