ಮೈಸೂರು: ವರುಣಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿರುವುದು ನಿಜ ಎಂದು ಬಿಜೆಪಿ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಚುನಾವಣೆಯಲ್ಲಿ ನಿಲ್ಲಬೇಕೊ, ಬೇಡವೋ. ನಿಲ್ಲುವುದಾದರೆ ಯಾವ ಕ್ಷೇತ್ರದಲ್ಲಿ ಎಂಬುದು ಎರಡು ವರ್ಷಗಳ ನಂತರ ತೀರ್ಮಾನವಾಗುತ್ತದೆ. ಬಿಜೆಪಿ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡುತ್ತದೆ. ಅಲ್ಲಿಯವರೆಗೆ ಪಕ್ಷ ಸಂಘಟನೆಗೆ ಇಡೀ ರಾಜ್ಯ ಸುತ್ತುವುದು ನನ್ನ ಕೆಲಸ. ವರುಣಾ ಕ್ಷೇತ್ರದ ಕಾರ್ಯಕರ್ತರ ಜೊತೆ ನಿರಂತರ ಸಂಪರ್ಕದಲ್ಲಿರುವುದು ನಿಜ. ಎಲ್ಲಾ ಕ್ಷೇತ್ರಗಳಲ್ಲೂ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಪಕ್ಷ ವಹಿಸಿರುವ ಜವಾಬ್ದಾರಿಯನ್ನು ನಾನು ನಿಭಾಯಿಸುತ್ತಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್ಗೆ ಬಿಜೆಪಿ ಆಡಳಿತ ಟೀಕಿಸುವ ನೈತಿಕತೆಯೇ ಉಳಿದಿಲ್ಲ. ಕೊರೊನಾ ಸಂಕಷ್ಟದ ಕಾಲದಲ್ಲಿ ಜನರ ನೋವಿಗೆ ಸ್ಪಂದಿಸುವುದನ್ನು ಮರೆತು ಹಾದಿ ಬೀದಿಯಲ್ಲಿ ನಿಂತು ಸಿಎಂ ಅಭ್ಯರ್ಥಿ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ಎಲ್ಲಾ ವಿಚಾರದಲ್ಲೂ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ನವರು ಬಿಜೆಪಿ ಬಗ್ಗೆ ಟೀಕಿಸುವುದು ಹಾಸ್ಯಸ್ಪದ ಎಂದರು. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮುಗಿದ ಅಧ್ಯಾಯ. ಹೈಕಮಾಂಡ್ ಈಗಾಗಲೇ ಈ ಬಗ್ಗೆ ಸ್ಪಷ್ಪಪಡಿಸಿದೆ. ಮತ್ತೆ ಪದೇ ಪದೇ ಈ ವಿಚಾರದ ಬಗ್ಗೆ ಚರ್ಚೆ ಬೇಡ. ಯಾರಾದರೂ ದೆಹಲಿಗೆ ಹೋಗಿದ್ದರೆ ಅದು ಅವರ ವೈಯಕ್ತಿಕ ವಿಚಾರ. ದೆಹಲಿಗೆ ಹೋದ ಕೂಡಲೇ ಅದಕ್ಕೆ ರಾಜಕೀಯ ಬಣ್ಣ ಹಚ್ಚುವುದು ಬೇಡ. ಇನ್ನೂ ಎರಡು ವರ್ಷ ಯಡಿಯೂರಪ್ಪ ಅವರೇ ಈ ರಾಜ್ಯದ ಸಿಎಂ ಆಗಿ ಇರುತ್ತಾರೆ. ಈ ಬಗ್ಗೆ ಮತ್ತೆ ಮತ್ತೆ ಗೊಂದಲ ಯಾರಿಗೂ ಬೇಡ ಎಂದು ಹೇಳಿದರು.