ಮಂಡ್ಯ: ಐತಿಹಾಸಿಕ ಮೈಸೂರು ದಸರಾದ ಮೂಲ ಸ್ಥಾನವಾದ ಶ್ರೀರಂಗಪಟ್ಟಣದಲ್ಲಿ ಪ್ರತಿವರ್ಷವೂ ಮೂರು ದಿನಗಳ ಕಾಲ ನಡೆಯುತ್ತಿದ್ದ ದಸರಾವನ್ನು ಈ ಬಾರಿ ಸರಳವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಕೊರೋನಾ ಮಹಾಮಾರಿ ಇರುವುದರಿಂದ ಶ್ರೀರಂಗಪಟ್ಟಣ ದಸರಾವನ್ನು ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕವಾಗಿ ಸರಳ ದಸರಾ ಆಚರಿಸುತ್ತಿರುವ ಬಗ್ಗೆ ಜಿಲ್ಲಾ ಉಸ್ತವಾರಿ ಸಚಿವ ಡಾ.ನಾರಾಯಣಗೌಡ ಅವರು ಮಾಹಿತಿ ನೀಡಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ದಸರಾ ಆಚರಣೆಯಲ್ಲಿ ಪಾಲ್ಗೊಳ್ಳುವಂತೆ ಹೇಳಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ತಾಲೂಕು ಕಚೇರಿಯಲ್ಲಿ ತಮ್ಮ ಅಧಕ್ಷತೆಯಲ್ಲಿ ನಡೆದ ಶ್ರೀರಂಗಟ್ಟಣ ದಸರಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಗರದ ಪ್ರಮುಖ ಬೀದಿಗಳಿಗೆ ದೀಪ ಅಲಂಕಾರ ಮಾಡಲಾಗುತ್ತಿದೆ. ಅ.24 ರಂದು ಮಧ್ಯಾಹ್ನ 3 ಗಂಟೆಗೆ ಬನ್ನಿ ಮಂಟಪಕ್ಕೆ ಪೂಜೆ ಸಲ್ಲಿಸಿ ಬಾಳೆ ಗಿಡ ಕಡೆದ ನಂತರ ಶ್ರೀ ಚಾಮುಂಡೇಶ್ವರಿ ಹಾಗೂ ಗಣಪತಿ ಪೂಜೆ ಮಾಡಿ ರಥೋತ್ಸವನ್ನು ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡುವ ಮೂಲಕ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಮುಕ್ತಾಯಗೊಳಿಸಲಾಗುತ್ತಿದೆ ಎಂದರು.
ಸಭೆಯಲ್ಲಿದ್ದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿ ಮೂರು ದಿನಕ್ಕೊಮ್ಮೆ ಬನ್ನಿ ಮಂಟಪ ಹಾಗೂ ಕಲ್ಯಾಣಿ ಸುತ್ತಮುತ್ತ ಸ್ವಚ್ಛತಾ ಕಾರ್ಯವನ್ನು ಪುರಸಭೆಯಿಂದ ಮಾಡಬೇಕು ಮತ್ತು ಬಾಬುರಾಯನಕೊಪ್ಪಲಿನಿಂದ ಕೆ.ಆರ್.ಎಸ್ ವರೆಗೂ ಇರುವ ರಸ್ತೆಯ ಡಿವೈಡರ್ ಅನ್ನು ಶುಚಿತ್ವಗೊಳಿಸಿ ಬಣ್ಣ ಬಳಿಸಬೇಕು ಎಂದು ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಜುಲ್ಫಿಕರ್ ಉಲ್ಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪರಶುರಾಮ್, ಉಪ ವಿಭಾಗ ಅಧಿಕಾರಿಗಳು ಮತ್ತು ದಸರಾ ಉಪಸಮಿತಿಯ ಅಧ್ಯಕ್ಷರಾದ ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣದ ತಹಶಿಲ್ದಾರರಾದ ರೂಪ ಮತ್ತು ದೇವಸ್ಥಾನದ ಮುಖ್ಯ ಅರ್ಚಕರು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯ ನಂತರ ಸಚಿವ ಡಾ.ನಾರಾಯಣಗೌಡ ಅವರು ಸೇರಿದಂತೆ ಅಧಿಕಾರಿಗಳು ದಸರಾ ನಡೆಯುವ ಸ್ಥಳವಾದ ಬನ್ನಿಮಂಟಪಕ್ಕೆ ತೆರಳಿ ಪರಿಶೀಲನೆ ನಡೆಸಿದರಲ್ಲದೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.