ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ನಗುವನಹಳ್ಳಿ ಗೇಟ್ ಬಳಿಯಿದ್ದ ಡಾಬಾದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 22 ಮಂದಿಯನ್ನು ಬಂಧಿಸಿ, 7 ಮಂದಿ ಮಹಿಳೆಯರನ್ನು ರಕ್ಷಿಸಿದ್ದಾರೆ.
ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ನಗುವನಹಳ್ಳಿ ಗೇಟ್ ಬಳಿಯಲ್ಲಿ ಫ್ಯಾಮಿಲಿ ಡಾಬಾವಿದ್ದು ಇದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೈಸೂರಿನ ಒಡನಾಡಿ ಸಂಸ್ಥೆಗೆ ಬಂದಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ನೇತೃತ್ವದ ಪೊಲೀಸರ ತಂಡ ಶನಿವಾರ ರಾತ್ರಿ ದಾಳಿ ನಡೆಸಿದ್ದು ಈ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 22 ಮಂದಿ ಸಿಕ್ಕಿಬಿದ್ದಿದ್ದಾರೆ. ಅಲ್ಲದೆ, 5 ಬೈಕ್ಗಳು, ಕಾರು, ಆಟೋಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಹಿಳೆಯರನ್ನು ಅಕ್ರಮವಾಗಿ ಕೂಡಿಡಲು ಡಾಬಾದಲ್ಲಿ ಸುರಂಗ ಮಾರ್ಗವನ್ನು ಕೊರೆಯಿಸಲಾಗಿದ್ದು, ದಾಳಿ ವೇಳೆ ಇದು ಬೆಳಕಿಗೆ ಬಂದಿದೆ. ಕಳೆದ 2008ರಲ್ಲಿ ಇದೇ ಡಾಬಾ ಮೇಲೆ ಪೊಲೀಸರು ದಾಳಿ ನಡೆಸಿ ಕೊಲ್ಕತ್ತಾ, ಮುಂಬೈ ಹಾಗೂ ಬಾಂಗ್ಲಾ ಮೂಲದ ಮಹಿಳೆಯರನ್ನು ರಕ್ಷಣೆ ಮಾಡಿದ್ದರು. ಆದರೂ ಡಾಬಾದ ಮಾಲೀಕರು ವೇಶ್ಯಾವಾಟಿಕೆಯನ್ನು ಮುಂದುವರಿಸಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ತಿಳಿಸಿದ್ದಾರೆ.
ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.