ಮಡಿಕೇರಿ ಜು.30 : ಬೋಯಿಕೇರಿ ಸಮೀಪ ಸೈನಿಕ ಕುಟುಂಬದ ಮೇಲೆ ನಡೆದ ಗುಂಪು ಹಲ್ಲೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ದೇಶ ಕಾಯುವ ಯೋಧ ಹಾಗೂ ಕುಟುಂಬದ ಮೇಲಿನ ಹಲ್ಲೆ ಖಂಡನೀಯವೆಂದರು. ಹಲ್ಲೆ ನಡೆಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಬಂಧಿತರನ್ನು ಬಿಡುಗಡೆಗೊಳಿಸುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಮುಖರು ಘಟನೆಯನ್ನು ಪೊಲೀಸರು ಲಘುವಾಗಿ ಪರಿಗಣಿಸಬಾರದೆಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಸಮಾಜಘಾತುಕ ಶಕ್ತಿಗಳು ಕಾರ್ಯಾಚರಿಸುತ್ತಿದ್ದು, ಪೊಲೀಸ್ ಇಲಾಖೆ ನಿಗಾ ವಹಿಸಬೇಕು. ಗೋಹತ್ಯೆ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಗಳ ಪ್ರಮುಖರು ಆಗ್ರಹಿಸಿದರು.ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ಕೊಡವ ಸಮಾಜ, ಗೌಡ ಸಮಾಜ, ಮಲೆಯಾಳಿ ಸಮಾಜ, ಮಾಜಿ ಸೈನಿಕರ ಸಂಘ, ರಾಜ್ಯ ರೈತ ಸಂಘ ಮತ್ತಿತರ ಸಂಘಟನೆಗಳು ಬೆಂಬಲ ಸೂಚಿಸಿದ್ದವು.
ಸ್ಥಳಕ್ಕೆ ಡಿಸಿ ಹಾಗೂ ಎಸ್ ಪಿ ಆಗಮಿಸಬೇಕೆಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಸುಮಾರು ಎರಡೂವರೆ ಗಂಟೆ ಕಾಲ ರಸ್ತೆ ತಡೆ ಮಾಡಿದರು. ಪರಿಣಾಮ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಸ್ಥಳಕ್ಕೆ ಭೇಟಿ ನೀಡಿದರು. ಘಟನೆಯ ಕುರಿತು ಹಿಂದೂ ಸಂಘಟನೆಗಳ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದರು. ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು. ಶಾಸಕ ಕೆ.ಜಿ.ಬೋಪಯ್ಯ ಅವರು ಕೂಡ ಘಟನೆಯನ್ನು ತೀವ್ರವಾಗಿ ಖಂಡಿಸಿದರು.
ಮಡಿಕೇರಿ ಜು.30 : ಸೈನಿಕ ಕುಟುಂಬದ ಮೇಲೆ ನಡೆದಿರುವ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರ ದಾಖಲಾದ ಸೆಕ್ಷನ್ ಗಳಡಿ ತನಿಖೆ ಮುಂದುವರೆದಿದೆ. ಈಗಾಗಲೇ ಐದು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ತಿಳಿಸಿದ್ದಾರೆ.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ, ರೌಡಿ ಶೀಟ್ ಓಪನ್ ಮಾಡ್ತಾ ಇದ್ದೀವಿ ಎಂದು ಸ್ಪಷ್ಟಪಡಿಸಿದರು.
ತನಿಖೆ ನ್ಯಾಯೋಚಿತವಾಗಿ ನಡೆಯಲಿದೆ, ಜಾಮೀನು ನೀಡುವ ಕುರಿತು ನ್ಯಾಯಾಲಯ ನಿರ್ಧರಿಸುತ್ತದೆ. ಚಿನ್ನಾಭರಣ ಕಸಿದುಕೊಂಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದ್ದು, ಈ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಹೇಳಿದರು.