ಸೋಮವಾರಪೇಟೆ: ತಾಲೂಕಿನಲ್ಲಿ ಟಿಪ್ಪು ಜಯಂತಿ ವಿರೋಧಿಸಿ ಇಲ್ಲಿನ ತಾಲೂಕು ಪಂಚಾಯಿತಿ ನಿರ್ಣಯ ಕೈಗೊಂಡಿದೆ. ಮಂಗಳವಾರ ತಾಲೂಕು ಪಂಚಾಯಿತಿ ಅಧ್ಯಕ್ಷೆ ಪುಷ್ಪರಾಜೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಟಿಪ್ಪು ಜಯಂತಿ ಪರ ವಿರೋಧ ಚರ್ಚೆಗಳು ನಡೆದವು.
ಬಿಜೆಪಿ ಬೆಂಬಲಿತ ಸದಸ್ಯರು ಜಯಂತಿ ವಿರೋಧಿಸಿದರೆ, ಸರ್ಕಾರಿ ಕಾರ್ಯಕ್ರಮವಾದ ಟಿಪ್ಪು ಜಯಂತಿಯನ್ನು ವಿರೋಧಿಸುವುದು ಕಾನೂನು ಬಾಹಿರ ಎಂದು ಕಾಂಗ್ರೆಸ್ ಸದಸ್ಯರು ವಾದಿಸಿದರು. ಬಿಜೆಪಿ ಬೆಂಬಲಿತ ಸದಸ್ಯರ ಬಹುಮತವಿದ್ದ ಕಾರಣ ಜಯಂತಿ ವಿರೋಧಿಸಿ ನಿರ್ಣಯ ಕೈಗೊಳ್ಳಲಾಯಿತು. ಜೆಡಿಎಸ್ ಬೆಂಬಲಿತ ಅಧ್ಯಕ್ಷೆ ಪುಷ್ಪ ರಾಜೇಶ್, ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಅನಂತ್ ಕುಮಾರ್, ಸುಹಾದ ಅಶ್ರಫ್, ಬಿ.ಬಿ.ಸತೀಶ್ ನಿರ್ಣಯಕ್ಕೆ ವಿರೋಧ ವ್ಯಕ್ತ ಪಡಿಸಿದರು.
ಬಸವ ವಸತಿ ಯೋಜನೆಯಲ್ಲಿ ಕೆಲ ಅಧಿಕಾರಿಗಳು ಹಣ ಮಾಡುವ ದಂಧೆಯಲ್ಲಿ ತೊಡಗಿದ್ದಾರೆ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಆರೋಪಿಸಿದರು. ಬಸವ ವಸತಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳನ್ನು ಗ್ರಾಮ ಪಂಚಾಯಿತಿ ಆಯ್ಕೆ ಮಾಡುತ್ತಿದ್ದಾರೆ. ಪಂಚಾಯಿತಿಯಲ್ಲಿ ಕೆಲ ಅಧಿಕಾರಿಗಳು ಸುಮಾರು 30 ಸಾವಿರ ರೂ. ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಫಲಾನುಭವಿಗಳ ಆಯ್ಕೆ ಗ್ರಾಮ ಸಭೆಯಲ್ಲಿ ಆಗಬೇಕು. ಈ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಆಯ್ಕೆಯಾಗಬೇಕು. ನಂತರ ಕೋರ್ ಸಮಿತಿ ಮುಂದೆ ಪಟ್ಟಿಯನ್ನು ಹಾಜರು ಪಡಿಸಬೇಕು. ಆದರೆ ಕೆಲವು ಗ್ರಾಮ ಪಂಚಾಯಿತಿಗಳು ಏಕಪಕ್ಷೀಯ ತೀರ್ಮಾನ ಕೈಗೊಂಡು, ಹಣ ಮಾಡುವ ದಂಧೆ ಮಾಡಿಕೊಂಡಿದ್ದಾರೆ ಎಂದು ದೂರಿದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಣಾಧಿಕಾರಿಗಳು ಪಂಚಾಯಿತಿ ಕಾಯ್ದೆಯಲ್ಲಿರುವಂತೆ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಬೇಕೆಂದು ಹೇಳಿದರು. ಫಲಾನುಭವಿಗಳಿಂದ ಹಣಕ್ಕೆ ಬೇಡಿಕೆ ಇಡುತ್ತಿರುವ ದೂರು ಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ದ ಕಾನೂನು ಕ್ರಮದೊಂದಿಗೆ ಅಮಾನತು ಪಡಿಸಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಸೂಚಿಸಲಾಗುವುದು ಎಂದು ಇಒ ಚಂದ್ರಶೇಖರ್ ಹೇಳಿದರು.
ತಾಲ್ಲೂಕು ಪಂಚಾಯಿತಿಯ ಅಧ್ಯಕ್ಷರಾದ ಪುಷ್ಪರಾಜೇಶ್ ಅವರು ಆಡಳಿತಾತ್ಮಕ ವಿಚಾರಗಳಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ವಿಫಲರಾಗುತ್ತಿದ್ದಾರೆ. ಅಭಿವೃದ್ಧಿ ವಿಚಾರಗಳ ಕುರಿತು ಅಸಡ್ಡೆ ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂದು ಪ್ರತಿ ಪಕ್ಷಗಳ ಸದಸ್ಯರು ಆಗ್ರಹಿಸಿದರು.
ಅಧ್ಯಕ್ಷರು ಜಿಲ್ಲಾ ಪಂಚಾಯಿತಿಯ ಸಭೆಗಳಲ್ಲಿ ಭಾಗವಹಿಸುತ್ತಿಲ್ಲ. ಕ್ರಿಯಾ ಯೋಜನೆ ಪಟ್ಟಿಯನ್ನು ಜಿಲ್ಲಾಪಂಚಾಯಿತಿಗೆ ಅನುಮೋದನೆಗೆ ಕಳುಹಿಸಬೇಕಾಗಿತ್ತು. ಸ್ವತಃ ತಾವೇ ಕ್ರಿಯಾಯೋಜನೆ ಸಲ್ಲಿಸದೇ ಇತರ ಸದಸ್ಯರ ಕ್ರಿಯಾ ಯೋಜನೆ ಪಟ್ಟಿಗೆ ಸಹಿ ಹಾಕಲಿಲ್ಲ. ಇದರಿಂದಾಗಿ 19 ಕ್ಷೇತ್ರಗಳ ಅಭಿವೃದ್ದಿಗೆ ಹಿನ್ನಡೆಯಾಗುತ್ತಿದೆ ಎಂದು ಸದಸ್ಯರು ಹೇಳಿದರು. ಈ ಸಂದರ್ಭ ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇನೆ ಎಂದ ಅಧ್ಯಕ್ಷರು ಸಭೆಯಲ್ಲಿ ಕ್ಷಮೆ ಯಾಚಿಸಿದರು.
ತಾಲ್ಲೂಕಿನ ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಇದೆ. ಕುಶಾಲನಗರ ಆಸ್ಪತ್ರೆಯಲ್ಲಿ ಮಧ್ಯಾಹ್ನ 2 ಗಂಟೆಯ ವರೆಗೆ ವೈದ್ಯರು ಬರುವುದಿಲ್ಲ. ಸುಂಟಿಕೊಪ್ಪ ಆಸ್ಪತ್ರೆಯಲ್ಲಿ ವೈದ್ಯರು ಔಷಧಾಲಯಗಳಿಗೆ ಚೀಟಿ ಬರೆದು ಕೊಡುತ್ತಾರೆ ಎಂದು ಸದಸ್ಯರಾದ ವಿಮಲಾವತಿ, ಅದಿಡ್ಡಳ್ಳಿ ನಿರಾಶ್ರಿತರಿಗೆ ಬ್ಯಾಡಗೊಟ್ಟದಲ್ಲಿ ಸೌಲಭ್ಯ ನೀಡಲು ಸಮಾಜ ಕಲ್ಯಾಣ ಇಲಾಖೆ ವಿಫಲವಾಗಿದೆ. ಇನ್ನೂ ನಿರಾಶ್ರಿತರಿಗೆ ಸೂರಿನ ವ್ಯವಸ್ಥೆ ಆಗಿರುವುದಿಲ್ಲ. ತಾಲ್ಲೂಕಿನ ಬಹುತೇಕ ಹಾಡಿಗಳಲ್ಲಿ ಮೂಲ ಸೌಲಭ್ಯದ ಕೊರತೆ ಇದೆ ಎಂದು ಅಭಿಮನ್ಯು ಕುಮಾರ್ ಹೇಳಿದರು.
ವೇದಿಕೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಧರ್ಮಪ್ಪ, ವಿವಿಧ ಇಲಾಖಾಧಿಕಾರಿಗಳು ಇದ್ದರು.