ಬಳ್ಳಾರಿ: ಐವರು ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಸುಮಾರು 25 ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಗಳ ತಂಡ ಬಿಮ್ಸ್​ ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್​, ಐಸಿಯು, ಔಷಧಿ ದಾಸ್ತಾನು ಉಗ್ರಾಣದಲ್ಲಿ ಪರಿಶೀಲನೆ ನಡೆಸುತ್ತಿದೆ. ಲೋಕಾಯುಕ್ತ ಎಸ್​ಪಿ ಸಿದ್ದರಾಜು ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಯ ಔಷಧ ವಿಭಾಗದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. IV ಹಾಗೂ RL ಪ್ಲೂಯಿಡ್ ಔಷಧಿ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಾಗೇ ಬಾಣಂತಿಯರ ಅಸ್ವಸ್ಥರಾಗಲು ಕಾರಣವೇನು ಎಂಬುವುದರ ಬಗ್ಗೆ ನಾಲ್ವರು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ.

ಬಿಮ್ಸ್​​ ಆಸ್ಪತ್ರೆಯಲ್ಲಿ ಒಂದು ತಿಂಗಳ ಅಂತರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದನ್ನು ಕರ್ನಾಟಕ ಬಿಜೆಪಿ ವಿಷಾಧ ವ್ಯಕ್ತಪಡಿಸಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ಜೊತೆಗೆ ಬಿಜೆಪಿಯ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಶಾಸಕ ಸಿಕೆ ರಾಮಮೂರ್ತಿ ಮತ್ತು ಎಂಎಲ್​​ಸಿ ರವಿಕುಮಾರ್​ ಒಳಗೊಂಡ ನಿಯೋಗ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿ ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿತ್ತು.

ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಲ್ಲಿ ಏನೆಲ್ಲಾ ನ್ಯೂನತೆಗಳಾಗಿವೆ ಅಂತ ನಾವು ತನಿಖೆ ಮಾಡುತ್ತಿದ್ದೇವೆ. ನಮಗೆ ಗೊತ್ತಾಗದೇ ಇನ್ನೆಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ ಗೊತ್ತಿಲ್ಲ. ಔಷಧಿ ತಯಾರಿಸಿದ ಕಂಪನಿ ಮೇಲೆ ಕ್ರಮ ಕೈಗೊಳ್ಳುತ್ತಿದ್ದೇವೆ. ಮೃತ ಬಾಣಂತಿಯರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದೇವೆ. ಇನ್ಮುಂದೆ ಇಂತಹ ಘಟನೆಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.