ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಬೇಕು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿತು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಹುಲ್ ಕಲೂತಿ ಮಾತನಾಡಿ, ರಾಜ್ಯ, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ಸಾಮಾನ್ಯರ ಬಗ್ಗೆ ಕಾಳಜಿ ಇಲ್ಲ. ಬಡವರು, ರೈತರು, ಕಾರ್ಮಿಕರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಪ್ರವಾಹದಿಂದ ಕಳೆದ ಮೂರುವ ವರ್ಷದಲ್ಲಿ ನೂರಾರು ಕೋಟಿ ರೂ. ನಷ್ಟವಾಗಿದೆ. ಸಾವಿರಾರು ಕುಟುಂಬಗಳು ಬೀದಿ ಬಿದ್ದಿವೆ. ಅವರಿಗೆ ಶಾಶ್ವತ ಪರಿಹಾರ ಕಲ್ಪಿಸುತ್ತಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಿಂದೇಟು ಹಾಕುತ್ತಿದೆ. ಇದರಿಂದ ಬಾಗಲಕೋಟೆ ಜಿಲ್ಲೆಗೆ ತೀವ್ರ ಸಮಸ್ಯೆ ಉಂಟಾಗಿದೆ. ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯಿಂದ ದೊಡ್ಡ ಆಘಾತ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜಿ.ನಂಜಯ್ಯನಮಠ, ರಾಜ್ಯ, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಬದ್ಧತೆ ಇಲ್ಲ. ಚುನಾವಣೆ ಪೂರ್ವದಲ್ಲಿ ಮಾಡುವ ಭಾಷಣಕ್ಕೂ ಆಡಳಿತ ನಡೆಸುವುದಕ್ಕೂ ವ್ಯತ್ಯಾಸವಿದೆ. ಭರವಸೆ ನೀಡಿದ ಯಾವ ಮಾತು ಉಳಿಸಿಕೊಂಡಿಲ್ಲ. ಮೂರು ವರ್ಷಗಳಿಂದ ಪ್ರವಾಹ ಉಂಟಾಗಿ ಜಿಲ್ಲೆಯ ನೂರಾರು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ಅವರಿಗೆ ಸೂಕ್ತ ಪರಿಹಾರ ನೀಡುತ್ತಿಲ್ಲ. ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯ ಧೋರಣೆ ಅನುರಿಸುತ್ತಿದೆ ಎಂದು ದೂರಿದರು.
ಬಿಜೆಪಿ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು. ಕೃಷ್ಣಾ ಮೇಲ್ದಂಡೆ ಯೋಜನೆ ೩ ನೇ ಹಂತ ಅನು ಷ್ಟಾನಗೊಳಿಸಬೇಕು. ಖಾಸಗೀ ಕರಣ ನೀತಿ ಕೈ ಬಿಡಬೇಕು. ಇಲ್ಲವಾದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಕಾಂಗ್ರೆಸ್ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
ಮುಖಂಡರಾದ ನಾಗರಾಜ ಹದ್ಲಿ, ನಿಖಿಲ ಪಾಟೀಲ, ಅಪ್ಪಾಸಾಹೇಬ ದೇಸಾಯಿ, ಧರ್ಮೇಂದ್ರ ಪ್ರಧಾನ, ಬಸವರಾಜ ಹೂವಿನಹಳ್ಳಿ, ಹುಲ್ಲಪ್ಪ ತೇಜಿ, ಹನುಮಂತ ಕಾನಗೌಡರ, ಚಿದಾನಂದ ನವಿಹಾಳ, ಮಲ್ಲು ಕಂಬಾರ, ಶ್ರೀಧರ ಕಾಂಬಳೆ, ಎನ್.ಬಿ.ಗಸ್ತಿ, ವಿಜಯ ಮುಳ್ಳೂರು ಇತರರು ಇದ್ದರು.