ಬಾಗಲಕೋಟೆ: ದೇಶದಲ್ಲಿ ಸಕ್ಕರೆ ಉತ್ಪಾದನೆಯಲ್ಲಿ ಮೊದಲ ಸ್ಥಾನವನ್ನು ಹೊಂದುವ ಮೂಲಕ ರಾಜ್ಯದಲ್ಲಿ ನೂರು ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡುವ ಕನಸನ್ನು ಇಟ್ಟುಕೊಂಡಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮತ್ತು ನಿರಾಣಿ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಮುರುಗೇಶ ನಿರಾಣಿ ಹೇಳಿದರು.
ನವನಗರದಲ್ಲಿ ತೇಜಸ್ ಅಂತರಾಷ್ಟ್ರೀಯ ಶಿಕ್ಷಣ ಸಮೂಹದ ಉದ್ಘಾಟನೆಯಲ್ಲಿ ಅವರು ಮಾತನಾಡಿದರು. ಈಗಾಗಲೇ ನಿರಾಣಿ ಸಮೂಹ 72,000 ಜನರಿಗೆ ಉದ್ಯೋಗ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ನೀರಾವರಿ ಹಾಗೂ ಉದ್ಯೋಗಕ್ಕೆ ಹೆಚ್ಚು ಒತ್ತು ನೀಡುವ ಕೆಲಸ ಮಾಡುವುದಾಗಿ ಹೇಳಿದರು.
ಸಂಸದ ಜಿ.ಎಂ.ಸಿದ್ದೇಶ್ವರ ಮಾತನಾಡಿ, ದೇಶದಲ್ಲೇ ನಿರಾಣಿ ಸಮೂಹದ ಸಕ್ಕರೆ ಕಾರ್ಖಾನೆಗಳು 65 ಲಕ್ಷ ಮೆ.ಟನ್ ನುರಿಸುತ್ತಿದೆ. 25 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸುವುದು ಏಷ್ಯಾ ಖಂಡದಲ್ಲೇ ಪ್ರಥಮ ಎಂದು ಹೇಳಿದರು.
ಹರಿಹರ ಪಂಚಮಸಾಲಿ ಪೀಠದ ವಚನನಾಂದ ಶ್ರೀಗಳು ಆಶೀರ್ವಚನ ನೀಡಿದರು. ಕಾರ್ಯಕ್ರಮವನ್ನು ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಬೇನ್ ಪಟೇಲ ಉದ್ಘಾಟಿಸಿದರು.